
ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ಹೆಚ್ಚು ಒತ್ತು ನೀಡಿ ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಎಚ್.ಎಂ. ಮಲ್ಲಿಕಾರ್ಜುನಸ್ವಾಮಿ ಶಿಕ್ಷಕರಿಗೆ ಸಲಹೆ ನೀಡಿದರು.
ಅವರು ಪಟ್ಟಣದ ಮೇಗಳಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಗುಲಾಬಿ ಹೂವು ನೀಡಿ, ಸಿಹಿ ವಿತರಿಸಿ ಸ್ವಾಗತಿಸಿ ಮಾತನಾಡಿದರು.
ಪೋಷಕರಿಗಿಂತ ಶಿಕ್ಷಕರಿಗೆ ಮಕ್ಕಳ ಮನಸ್ಥಿತಿ ಹೆಚ್ಚು ತಿಳಿದಿರುತ್ತದೆ. ಮಕ್ಕಳಿಗೆ ಆರಂಭದಿಂದಲೇ ಕಲಿಕೆಯಲ್ಲಿ ಆಸಕ್ತಿ ಮೂಡುವಂತೆ ಮಾಡಬೇಕು ಎಂದು ಹೇಳಿದರು.
ಮುಂಬರುವ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಯಾಗಲು ಶಿಕ್ಷಕರು ಶ್ರಮ ವಹಿಸಬೇಕು. ಮೇಗಳಪೇಟೆ ಸ.ಹಿ.ಪ್ರಾ ಶಾಲೆಗೆ ಮೂಲ ಸೌಕರ್ಯಗಳನ್ನು ಶಾಸಕರು ಒದಗಿಸಿದ್ದಾರೆ, ಉಳಿದ ಅಭಿವೃದ್ಧಿ ಕೆಲಸ ಸಹ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಅಂತಹ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಮಕ್ಕಳಿಗೆ ತಿಳಿಸಿದರು.