ನವದೆಹಲಿ: ಚಿತ್ರದುರ್ಗ ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಎದುರಿಸಿದ ಪ್ರಕೃತಿ ವಿಕೋಪಗಳಿಂದ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ.
ಲೋಕಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಆರ್.ಎನ್.ಕೆ. ಠಾಕೂರ್ ಅವರು ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ 2016ರಿಂದ ಕರ್ನಾಟಕದಲ್ಲಿ ಯಶಸ್ವಿಯಾಗಿ ಜಾರಿಯಲ್ಲಿದ್ದು, ಇದುವರೆಗೆ ರಾಜ್ಯದಲ್ಲಿ 1.34 ಕೋಟಿ ಅರ್ಜಿಗಳಿಗೆ ಒಟ್ಟು 18,783 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಗೆ ಬಿಡುಗಡೆಗೊಂಡಿರುವ 12.40 ಕೋಟಿ ರೂ. ಪರಿಹಾರವು ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಒಳಗಾಗಿದ್ದ ರೈತ ಕುಟುಂಬಗಳಿಗೆ ಮಹತ್ವದ ಆರ್ಥಿಕ ನೆರವಾಗಿದ್ದು, ಅವರ ಜೀವನೋಪಾಯಕ್ಕೆ ಹೊಸ ಭರವಸೆಯನ್ನು ನೀಡಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ರೈತರಿಗೆ ಸಂಕಷ್ಟದ ಸಮಯದಲ್ಲಿ ರಕ್ಷಾಕವಚ ಒದಗಿಸಲಾಗುತ್ತಿದ್ದು, ಬೆಳೆ ನಷ್ಟದ ಭಾರವನ್ನು ತಗ್ಗಿಸಲು ಈ ಯೋಜನೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.



