ರಾಯಚೂರು: ಮೊಹರಂ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಕಾನ್ಸ್ಟೇಬಲ್ ಮೃತಪಟ್ಟಿರುವ ಘಟನೆ ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ.
ಮೃತರನ್ನು ರೇಣುಕಾರಾಜ (38) ಎಂದು ಗುರುತಿಸಲಾಗಿದೆ. ಅವರು ದೇವದುರ್ಗ ಡಿಎಆರ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಿಪಿಐ ಅವರ ವಾಹನ ಚಾಲಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು.
ಮೊಹರಂ ಹಬ್ಬದ ಭದ್ರತಾ ಬಂದೋಬಸ್ತ್ ಹಿನ್ನೆಲೆಯಲ್ಲಿ ಮದರಕಲ್ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಜೀಪ್ ಚಾಲನೆ ಮಾಡುತ್ತಿದ್ದ ರೇಣುಕಾರಾಜ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಖಾಸಗಿ ಕಾರಿನ ಮೂಲಕ ದೇವದುರ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ರೇಣುಕಾರಾಜ ಅವರು ಲಿಂಗಸುಗೂರು ತಾಲೂಕಿನ ಅಮದಿಹಾಳ ಗ್ರಾಮದವರಾಗಿದ್ದು, 2008ನೇ ಬ್ಯಾಚ್ನ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದರು. ಹಲವು ವರ್ಷಗಳಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್)ಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯನಿಷ್ಠ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.
ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಪೊಲೀಸ್ ಇಲಾಖೆಯಲ್ಲಿ ದುಃಖದ ವಾತಾವರಣ ಸೃಷ್ಟಿಸಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬದವರಿಗೆ ಸಂತಾಪ ಸೂಚಿಸಿದ್ದಾರೆ.



