ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಹೈಕೋರ್ಟ್ ನೀಡಿದ ಜಾಮೀನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಕೊಲೆ ಪ್ರಕರಣದ ಆರೋಪಿಗಳನ್ನು ಮತ್ತೆ ಜೈಲಿಗೆ ಕಳಿಸಿದೆ. ಈ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಬಗ್ಗೆ ಅಸಭ್ಯ, ಅಶ್ಲೀಲ ಪೋಸ್ಟ್ ಹಾಕಲಾಗುತ್ತಿದೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮಹಿಳಾ ಆಯೋಗ ಪತ್ರ ಬರೆದಿದೆ.
ಆಯೋಗಕ್ಕೆ ಬಂದ ದೂರಿನ ಆಧಾರದ ಮೇಲೆ ಕ್ರಮ ತೆಗೆದುಕೊಂಡು ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಸೂಚಿಸಿದೆ.
ನೆಲಮಂಗಲದ ಭಾಸ್ಕರ್ ಪ್ರಸಾದ್ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ‘ವಿಜಯಲಕ್ಷ್ಮೀ ದರ್ಶನ್ ಹಾಗೂ ಇವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣಿನ ಸ್ವಾಭಿಮಾನ ಹಾಗೂ ಗೌರವಕ್ಕೆ ಧಕ್ಕೆ ತರುವಂತಹ ಪೋಸ್ಟ್ ಮಾಡುವವರ ವಿರುದ್ದ ಕಾನೂನು ಕ್ರಮ ಜರುಗಿಸಿ ನ್ಯಾಯ ಹಾಗೂ ರಕ್ಷಣೆ ಒದಗಿಸಿ’ ಎಂದು ಮಹಿಳಾ ಆಯೋಗಕ್ಕೆ ಅವರು ಮನವಿ ಮಾಡಿದ್ದಾರೆ.
‘ಅರ್ಜಿದಾರರ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ 15 ದಿನಗಳ ಓಳಗಾಗಿ ಸಲ್ಲಿಸುವಂತೆ ಕೋರಿದೆ’ ಎಂದು ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಅವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.


