ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ.
ತೀವ್ರ ಪೈಪೋಟಿಯ ನಡುವೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ವಿರುದ್ಧ 5,708 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಈ ಮೂಲಕ ಅಜ್ಜ ಶಾಮನೂರು ಶಿವಶಂಕರಪ್ಪ ಅವರ ರಾಜಕೀಯ ಹಾದಿಯನ್ನು ಮೊಮ್ಮಗ ಸಮರ್ಥ ಮುಂದುವರಿಸಿದ್ದು, ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆಗೆ ಪ್ರವೇಶಿಸಿದಂತಾಗಿದೆ. ತಂದೆ ಎಸ್.ಎಸ್. ಮಲ್ಲಿಕಾರ್ಜುನ ಅವರಂತೆ ಸಮರ್ಥ ಕೂಡ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದು, 27ನೇ ವಯಸ್ಸಿನಲ್ಲಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ.
ಮತ ಎಣಿಕೆ ವಿವರಗಳ ಪ್ರಕಾರ, ಸಮರ್ಥ್ ಶಾಮನೂರು 68,619 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ 63,746 ಮತಗಳನ್ನು ಪಡೆದಿದ್ದಾರೆ. ಎಸ್ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 18,485 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
ಈ ಉಪಚುನಾವಣೆಯಲ್ಲಿ ಎಸ್ಡಿಪಿಐ ದಾಖಲೆಯ ಮತಗಳನ್ನು ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದು, ಅಲ್ಪಸಂಖ್ಯಾತ ಮತಗಳ ವಿಭಜನೆ ಕಾಂಗ್ರೆಸ್ಗೆ ಸವಾಲಾಗಿ ಪರಿಣಮಿಸಿದೆ. ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆ ಸಮುದಾಯದ ಒಂದು ಭಾಗ ಎಸ್ಡಿಪಿಐಗೆ ಬೆಂಬಲಿಸಿದ ಪರಿಣಾಮ ಕಾಂಗ್ರೆಸ್ ಗೆಲುವಿನ ಅಂತರ ಕಡಿಮೆಯಾಗಿದೆ ಎನ್ನಲಾಗಿದೆ.
ತಂದೆ ಸಚಿವ, ತಾಯಿ ಸಂಸದೆ ಹಾಗೂ ತಾತ ಹಿರಿಯ ರಾಜಕಾರಣಿ ಎಂಬ ಬಲವಾದ ಹಿನ್ನೆಲೆ ಇದ್ದರೂ, ಸಮರ್ಥ್ ಶಾಮನೂರು ಕಡಿಮೆ ಅಂತರದಲ್ಲಿ ಜಯ ಸಾಧಿಸಿರುವುದು ಗಮನಾರ್ಹವಾಗಿದೆ. ಈ ಫಲಿತಾಂಶವು ಸಾಂಪ್ರದಾಯಿಕ ರಾಜಕೀಯ ಲೆಕ್ಕಾಚಾರಗಳನ್ನು ಬದಲಿಸಿದ್ದು, ಬಿಜೆಪಿ-ಕಾಂಗ್ರೆಸ್ ನೇರ ಹಣಾಹಣಿಯ ನಡುವೆ ಮೂರನೇ ಶಕ್ತಿ ಹೊರಹೊಮ್ಮುವ ಸೂಚನೆ ನೀಡಿದೆ.
ಒಟ್ಟಾರೆ, ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.



