ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಅಲ್ಪಸಂಖ್ಯಾತರಲ್ಲಿ ಉಂಟಾಗಿರುವ ಅಸಮಾಧಾನವನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನು ಮನವೊಲಿಸಿ, ಸಮಾಧಾನಪಡಿಸಲಾಗುತ್ತದೆ. ಅವರಿಗೆ ಪರ್ಯಾಯ ಅವಕಾಶಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.
ಉಪಚುನಾವಣೆ ಕುರಿತು ಮಾತನಾಡಿದ ಸಿಎಂ, ಎರಡೂ ಕ್ಷೇತ್ರಗಳಲ್ಲಿ ಶೇ.100 ಗೆಲುವು ಸಾಧಿಸುವ ವಿಶ್ವಾಸವಿದೆ. ಬಿಜೆಪಿಯವರು ಹಿಂದೆಯೂ ಇದೇ ರೀತಿಯ ಭರವಸೆ ನೀಡಿದ್ದರು. ಬಸವರಾಜ್ ಬೊಮ್ಮಾಯಿ ಹಾಗೂ ಕುಮಾರಸ್ವಾಮಿ ಪುತ್ರ ಗೆಲ್ಲುತ್ತಾರೆ ಎಂದು ಹೇಳಿದ್ದರು, ಆದರೆ ಸೋಲು ಕಂಡರು ಎಂದು ಟೀಕಿಸಿದರು.
ನಾವು ನುಡಿದಂತೆ ನಡೆದುಕೊಂಡಿದ್ದೇವೆ. ಜನರಿಗೆ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಬೈಎಲೆಕ್ಷನ್ ಗೆದ್ದು ಅದನ್ನು ಸಾಬೀತುಪಡಿಸಿದ್ದೇವೆ ಎಂದರು.
ಬಡವರು, ಅಲ್ಪಸಂಖ್ಯಾತರು ಹಾಗೂ ರಾಜ್ಯದ ಜನರು ನಮ್ಮ ಪರವಾಗಿದ್ದಾರೆ. ಈ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ನಾವು ಅಧಿಕಾರದಲ್ಲಿದ್ದೇವೆ, ಸಂಪೂರ್ಣ ಗೆಲುವಿನ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಪಂಚರಾಜ್ಯ ಚುನಾವಣೆಯಲ್ಲಿಯೂ ಬಿಜೆಪಿ ಎಲ್ಲಾ ಕಡೆ ಸೋಲು ಕಾಣಲಿದೆ ಎಂದು ಹೇಳಿದರು.



