ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮುಂಗಾರು ಮಳೆ ಕೊರತೆಯಿಂದ ಸಂಕಷ್ಟಕ್ಕೀಡಾಗಿರುವ ರೈತರ ನೆರವಿಗೆ ಜಿಲ್ಲಾಡಳಿತ ಮುಂದಾಗಿದ್ದು, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಶನಿವಾರ ಶಿರಹಟ್ಟಿ ತಾಲೂಕಿನ ಛಬ್ಬಿ ಹಾಗೂ ಬೆಳ್ಳಟ್ಟಿ ಗ್ರಾಮಗಳಿಗೆ ಭೇಟಿ ನೀಡಿ ಹೊಲಗಳಲ್ಲಿ ಬೆಳೆಗಳ ಸ್ಥಿತಿಗತಿ ಪರಿಶೀಲಿಸಿದರು.
ಹೆಸರು, ಮೆಕ್ಕೆಜೋಳ ಹಾಗೂ ಶೇಂಗಾ ಬೆಳೆದ ಜಮೀನುಗಳಲ್ಲಿ ಮಳೆ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ವೀಕ್ಷಿಸಿದ ಅವರು, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಧೈರ್ಯ ತುಂಬಿದರು.
ರೈತರು ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಬೆಳೆ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು. ಇದರಿಂದ ಬೆಳೆ ಬಿತ್ತನೆ ಪ್ರದೇಶದ ನಿಖರ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಲಿದೆ ಎಂದು ತಿಳಿಸಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಸಾಲ ಪಡೆದ ರೈತರು ಹೆಸರು ಹಾಗೂ ಹತ್ತಿ ಬೆಳೆಗಳಿಗೆ ಜು.22ರೊಳಗೆ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಚಿದಾನಂದಪ್ಪ, ತಹಸೀಲ್ದಾರ್ ಕೆ. ರಾಘವೇಂದ್ರರಾವ್, ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ ಕಾಶಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.



