ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವನ್ನು ಮಾರ್ಚ್ 26ರಂದು ಮುಕ್ತಾಯಗೊಳಿಸಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ಪ್ರಕಟಿಸಿದ್ದಾರೆ.
ವಿಧಾನಸಭೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನಗಳ ಕುರಿತು ಸದನದಲ್ಲಿ ಮಾಹಿತಿ ನೀಡಿದ ಅವರು, ಬಜೆಟ್ ಮೇಲಿನ ಚರ್ಚೆ ಇಂದು ಕೊನೆಗೊಳ್ಳಲಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆಗೆ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಮಾರ್ಚ್ 27ರವರೆಗೆ ಅಧಿವೇಶನ ಮುಂದುವರಿಸುವ ಯೋಜನೆ ಇದ್ದರೂ, ಇದೀಗ ಒಂದು ದಿನ ಮೊಟಕುಗೊಳಿಸಿ ಮಾರ್ಚ್ 26ಕ್ಕೆ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ.
ಎರಡು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಹಿನ್ನೆಲೆ, ಪ್ರಚಾರ ಕಾರ್ಯಕ್ಕೆ ಸದಸ್ಯರು ತೆರಳಬೇಕಿರುವುದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಎಲ್ಲಾ ಪಕ್ಷಗಳ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ.
ಈ ಮೂಲಕ 13 ದಿನಗಳ ಕಾಲ ನಡೆಯಬೇಕಿದ್ದ ಅಧಿವೇಶನವನ್ನು 12 ದಿನಗಳಿಗೆ ಸೀಮಿತಗೊಳಿಸಿ ಮುಕ್ತಾಯಗೊಳಿಸಲಾಗುತ್ತಿದೆ.



