ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಪದಾಧಿಕಾರಿಗಳು ಶನಿವಾರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಅಶೋಕ ಹುಬ್ಬಳ್ಳಿ ಮಾತನಾಡಿ, ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಹಾಗೂ ರೈತ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಸರ್ಕಾರ ಈಗಾಗಲೇ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಆದರೆ ಶಿರಹಟ್ಟಿ ತಾಲೂಕನ್ನು ಈ ಪಟ್ಟಿಯಲ್ಲಿ ಸೇರಿಸದಿರುವುದು ತಾಲೂಕಿನ ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿ ಬರದ ಪರಿಸ್ಥಿತಿ ಇದ್ದರೂ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿರುವುದರಿಂದ ರೈತರಿಗೆ ಸರ್ಕಾರದ ಪರಿಹಾರ ಮತ್ತು ಸೌಲಭ್ಯಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಮತ್ತು ನೆರವು ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಢಾಕಪ್ಪ ಲಮಾಣಿ, ಮಹಮ್ಮದ್ ಅಜರುದ್ದೀನ್ ಹೆಸರೂರ, ಲಿಂಬಣ್ಣ ಲಮಾಣಿ, ಪರಶುರಾಮ ಹುಬ್ಬಳ್ಳಿ, ಪವನ ಹುಬ್ಬಳ್ಳಿ, ರವಿ ಲಮಾಣಿ, ಅವಿನಾಳ ಲಮಾಣಿ ಹಾಗೂ ಸುಭಾಸ ಅಂಬಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.



