ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಮತದಾನ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ಪವಿತ್ರವಾದ ಮತದಾನದಿಂದ ಸುಭದ್ರ ಪ್ರಜಾಪ್ರಭುತ್ವ ರಾಷ್ಟç ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಾವು ವಾಸಿಸುವ ಪ್ರದೇಶ, ಗ್ರಾಮ, ವೃತ್ತಿ ಕ್ಷೇತ್ರಗಳಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ತಾ.ಪಂ ಇಓ ಕೃಷ್ಣಪ್ಪ ಧರ್ಮರ ಹೇಳಿದರು.
ಅವರು ಮಂಗಳವಾರ ಪಟ್ಟಣದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಶಿಶು ಅಭಿವೃದ್ಧಿ ಕಚೇರಿ ಮತ್ತು ತಾ.ಪಂ ಸಹಯೋಗದಲ್ಲಿ ದೀಪ ನಡಿಗೆ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಟ್ಟಣದ ಪೊಲೀಸ್ ಠಾಣೆಯಿಂದ ಪ್ರಾರಂಭಗೊಂಡ ಜಾಥಾ ಇಂದಿರಾನಗರ, ಕಲಾಂ ನಗರ, ಮುಕ್ತಿ ನಗರ, ಬಸವೇಶ್ವರ ನಗರದ ಮೂಲಕ ಹೊಸ ಬಸ್ ನಿಲ್ದಾಣದಲ್ಲಿ ಸಂಪನ್ನಗೊಂಡಿತು. ಈ ವೇಳೆ ಮಾತನಾಡಿದ ಸಿಡಿಪಿಓ ಮೃತ್ಯುಂಜಯ ಗುಡ್ಡದನ್ವೇರಿ, ಮೇ 7ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಶೇ.100ರಷ್ಟು ಮತದಾನವಾಗಬೇಕು. ಪ್ರತಿಯೊಬ್ಬ ಮತದಾರರೂ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಆಸೆ-ಆಮಿಷ, ಪ್ರೇರಣೆಗಳಿಗೆ ಒಳಗಾಗದೆ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುವ ಮೂಲಕ ಬಲಿಷ್ಠ ರಾಷ್ಟç ನಿರ್ಮಾಣಕ್ಕೆ ಮುನ್ನುಡಿ ಬರೆಯಲು ಕಡ್ಡಾಯ ಮತದಾನ ಮಾಡಬೇಕು ಎಂದು ಹೇಳಿದರು.
ಈ ವೇಳೆ ಪಿಎಸ್ಐ ಈರಣ್ಣ ರಿತ್ತಿ, ರಮೇಶ ರಾಠೋಡ, ನಂದಾ ನವಲೆ, ಗೀತಾ ಮುಳಗುಂದ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮಹಿಳಾ ಸ್ವ-ಸಹಾಯ ಸಂಘದ ಮಹಿಳೆಯರು, ಕೆಎಸ್ಆರ್ಟಿಸಿ ಸಿಬ್ಬಂದಿ ಪಾಲ್ಗೊಂಡಿದ್ದರು.