ಬೆಂಗಳೂರು: ದುರಾಡಳಿತ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಜಗಳದಲ್ಲಿ ತೊಡಗಿರುವ ರಾಜ್ಯ ಸರ್ಕಾರ ಅನಾಥ ಮಕ್ಕಳಿಗೂ ನ್ಯಾಯ ನೀಡುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದರು. ಕಳೆದ ಏಳು ತಿಂಗಳಿನಿಂದ ಅನಾಥ ಮಕ್ಕಳಿಗೆ ನೀಡಬೇಕಾದ ಅನುದಾನವನ್ನು ಬಿಡುಗಡೆ ಮಾಡದೇ ಸರ್ಕಾರ ವಿಳಂಬ ಧೋರಣೆ ಅನುಸರಿಸಿದೆ ಎಂದು ವಾಗ್ದಾಳಿ ನಡೆಸಿದರು.
ಬುಧವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿವಿಧ ಕಾರಣಗಳಿಂದ ಅನಾಥರಾಗಿರುವ ಮಕ್ಕಳ ಸಂಖ್ಯೆ ರಾಜ್ಯದಲ್ಲಿ 26,334 ಇದೆ. ಇವರ ಊಟ ಹಾಗೂ ವಸತಿ ನಿರ್ವಹಣೆಗೆ ಪ್ರತಿ ತಿಂಗಳು ಪ್ರತಿ ಮಗುವಿಗೆ 4,000 ರೂ. ನೀಡಬೇಕಾಗಿದೆ.
ಆದರೆ ಸರ್ಕಾರವು ಕಳೆದ ಏಳು ತಿಂಗಳಿನಿಂದ ಸುಮಾರು 75 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು. “ಅನಾಥ ಮಕ್ಕಳ ಹಣವನ್ನೇ ತಡೆಹಿಡಿದಿರುವ ಸರ್ಕಾರ ದಿವಾಳಿಯಾಗಿದೆಯೇ?” ಎಂದು ಪ್ರಶ್ನಿಸಿದರು.
ಇದೇ ವೇಳೆ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿರುವುದನ್ನು ಉಲ್ಲೇಖಿಸಿದರು. ನೌಕರರ ವಿರುದ್ಧ ಎಸ್ಮಾ ಜಾರಿಗೆ ತರಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದ್ದರೂ, ನೌಕರರು ಹೋರಾಟಕ್ಕೆ ಸಜ್ಜಾಗಿದ್ದಾರೆ ಎಂದರು.
ತಾವು ಸಾರಿಗೆ ಸಚಿವರಾಗಿದ್ದ ಅವಧಿಯಲ್ಲಿ ಸಾರಿಗೆ ನಿಗಮಗಳು ನಷ್ಟದಲ್ಲಿರಲಿಲ್ಲ ಎಂದು ಹೇಳಿದ ಅವರು, “ಒಂದು ವೇಳೆ ನಷ್ಟದಲ್ಲಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಲಿ” ಎಂದು ಸರ್ಕಾರಕ್ಕೆ ಸವಾಲು ಹಾಕಿದರು.



