ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಯುವನಿಧಿ, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಲು ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯಡಿ ನಿಧನರಾದ ಫಲಾನುಭವಿಗಳ ಹೆಸರುಗಳನ್ನು ತೆಗೆದುಹಾಕುವಂತೆ ಈಗಾಗಲೇ ಸೂಚನೆ ನೀಡಲಾಗಿತ್ತು. 7,725 ಮಂದಿ ಫಲಾನುಭವಿಗಳು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದ್ದು, ಅದರಲ್ಲಿ 280 ಜನರನ್ನು ಯೋಜನೆಯಿಂದ ಕೈಬಿಡಲಾಗಿದೆ. ನಕಲಿ ಮರಣ ಪ್ರಮಾಣ ಪತ್ರಗಳೂ ಪತ್ತೆಯಾಗಿರುವುದರಿಂದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಯುವನಿಧಿ ಯೋಜನೆಯ ಹಣ ಜನವರಿವರೆಗೆ ಮಾತ್ರ ಪಾವತಿಯಾಗಿದ್ದು, ಫೆಬ್ರವರಿಯಿಂದ ಮೇ ತಿಂಗಳವರೆಗೆ ಹಣ ಯಾಕೆ ಬಿಡುಗಡೆಯಾಗಿಲ್ಲ ಎಂಬುದರ ಕುರಿತು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು. ಐಟಿಐ ಹಾಗೂ ಜಿಟಿಟಿಸಿ ಕಾಲೇಜುಗಳಲ್ಲಿ ಕೌಶಲ್ಯ ತರಬೇತಿ ಆಯೋಜಿಸುವಂತೆಯೂ ಹೇಳಿದರು.
ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ಮುಂದಾಗಿದೆ. ಮುಮ್ಮಿಗಟ್ಟಿ ಐಟಿಐ ಕಾಲೇಜು ಹಾಗೂ ದೇವಿಕೊಪ್ಪ ಭಾಗದ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.
ಮಳೆಗಾಲ ಆರಂಭವಾಗುತ್ತಿರುವುದರಿಂದ ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್ ಕಂಬಗಳ ಬಗ್ಗೆ ಹೆಸ್ಕಾಂ ಅಧಿಕಾರಿಗಳು ಗಮನಹರಿಸಬೇಕು. ಗ್ರಾಮೀಣ ಭಾಗದಲ್ಲಿ ಬೀಳುವ ಹಂತದಲ್ಲಿರುವ ಕಂಬಗಳನ್ನು ತಕ್ಷಣ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ರೇಹಾನ್ ರಝಾ ಐನಾಪೂರಿ, ಮುರುಗಯ್ಯ ವಿರಕ್ತಮಠ, ಶಾಂತಪ್ಪ ಅಕ್ಕಿ, ಸುಧೀರ ಬೋಳಾರ, ರತ್ನಾ ತೇಗೂರಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಯಾವುದೇ ಕಾರಣಕ್ಕೂ ಸರ್ಕಾರದ ಹಣ ದುರುಪಯೋಗ ಆಗಬಾರದು. ಸಭೆಗೆ ಬರುವ ಮುನ್ನ ತಾಲ್ಲೂಕುವಾರು ಮಾಹಿತಿ ಸಿದ್ಧಪಡಿಸಿಕೊಂಡೇ ಅಧಿಕಾರಿಗಳು ಹಾಜರಾಗಬೇಕು”
ಎಸ್.ಆರ್. ಪಾಟೀಲ



