ವಿಜಯಸಾಕ್ಷಿ ಸುದ್ದಿ, ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸುವಂತೆ ದಲಿತ ಸಂರಕ್ಷಣಾ ಸಮಿತಿ ಒಕ್ಕೂಟ ಕರೆ ನೀಡಿದ್ದ ಗದಗ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಬೆಳಗ್ಗೆ ೬ ಗಂಟೆಯಿಂದಲೇ ಆರಂಭಗೊಂಡ ಪ್ರತಿಭಟನೆಯಲ್ಲಿ ನಗರದ ಮುಳಗುಂದ ನಾಕಾ ಬಳಿ. ಪ್ರತಿಭಟನಕಾರರು ಅಮಿತ್ ಶಾ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಬಳಿಕ ನಗರದ ವಿವಿಧೆಡೆ ಬೈಕ್ ರ್ಯಾಲಿ ನಡೆಸಿ, ಕೊನೆಗೆ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು.
ಬೆಟಗೇರಿ ಬಸ್ ನಿಲ್ದಾಣ, ಗದಗ ಹೊಸ ಮತ್ತು ಹಳೆ ಬಸ್ ನಿಲ್ದಾಣ, ಮುಳಗುಂದ ನಾಕಾ, ಹಾತಲಗೇರಿ ನಾಕಾ, ಟಿಪ್ಪು ವೃತ್ತ ಸೇರಿ ನಗರದ ಪ್ರಮುಖ ವೃತ್ತ ಹಾಗೂ ಪ್ರದೇಶಗಳಲ್ಲಿ ದಲಿತ ಮುಖಂಡರು ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಬಂದ್ ಆಚರಿಸಿದರು.
ದೇಶದಲ್ಲಿ ೨೫ ಕೋಟಿಗೂ ಹೆಚ್ಚು ಇರುವ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಡಾ. ಬಿ.ಆರ್. ಅಂಬೇಡ್ಕರ್ ಸಾಕ್ಷಾತ್ ದೇವರಾಗಿದ್ದಾರೆ. ಅಂಬೇಡ್ಕರ್ ಅವರನ್ನು ಅವಮಾನಿಸುವುದನ್ನು ಸಹಿಸುವುದಿಲ್ಲ. ಅಮಿತ್ ಶಾ ದೇಶದ ಜನರೆದುರು ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಪ್ರತಿಭಟನೆಯ ಕಿಚ್ಚು ದೇಶವ್ಯಾಪಿ ವಿಸ್ತರಿಸಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಗದಗ ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು, ಚಿತ್ರಮಂದಿರಗಳು, ಪ್ರಮುಖ ಬೀದಿಗಳಲ್ಲಿರುವ ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳು ಮುಚ್ಚಿದ್ದವು. ಗದಗ ಬಂದ್ ಘೋಷಣೆಯ ಹಿನ್ನೆಲೆಯಲ್ಲಿ ಬಹುತೇಕ ಗ್ರಾಮಾಂತರ ಪ್ರದೇಶದ ಜನರು ನಗರಕ್ಕೆ ಆಗಮಿಸಿರಲಿಲ್ಲ. ಆದರೆ ಅನಿವಾರ್ಯ ಕಾರಣಗಳಿಂದ ನಗರಕ್ಕೆ ಆಗಮಿಸಿದ ಜನರು ಆಟೊ, ಬಸ್ ಸೌಕರ್ಯವಿಲ್ಲದೆ ಸಮಸ್ಯೆ ಎದುರಿಸಿದರು. ಸಿದಂತಾಗಿತ್ತು. ಸಾರಿಗೆ ಬಸ್ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.
ಹಲವು ಸಂಘಟನೆಗಳ ಬೆಂಬಲ
ದಲಿತ ಸಂರಕ್ಷಣಾ ಸಮಿತಿ, ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟ, ರೈತ ಸಂಘಟನೆಗಳು, ಕಟ್ಟಡ ಕಾರ್ಮಿಕ ಸಂಘಟನೆಗಳು, ಬಸವದಳ, ಆಟೊ ಚಾಲಕರು-ಮಾಲೀಕರ ಸಂಘ, ಜೈಭೀಮ್ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ಭೀಮ್ ಆರ್ಮಿ, ಬೀದಿಬದಿ ವ್ಯಾಪಾರಸ್ಥರ ಸಂಘ, ಜಿಲ್ಲಾ ಸ್ಲಂ ಸಮಿತಿ, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರು.
ಪೊಲೀಸ್ ಬಂದೋಬಸ್ತ್
ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಇಬ್ಬರು ಎಸ್ಪಿ, ೩ ಜನ ಡಿವೈಎಸ್ಪಿ, ೧೦ ಸಿಪಿಐ, ೩೦ ಜನ ಪಿ.ಎಸ್.ಐ, ೫೦೦ ಜನ ಪೊಲೀಸ್ ಸಿಬ್ಬಂದಿಗಳು, ಎರಡು ಕೆ.ಎಸ್.ಆರ್.ಪಿ ತುಕಡಿ, ಹೋಮ್ ಗಾರ್ಡ್ ಒಳಗೊಂಡAತೆ ಸಾವಿರಾರು ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.
ಜಿಲ್ಲಾಧಿಕಾರಿಗಳಿಗೆ ಮನವಿ
ಅವಳಿ ನಗರದಲ್ಲಿ ವ್ಯಾಪಾರ-ವಹಿವಾಟು, ಅಂಗಡಿ, ಮುಂಗಟ್ಟು, ವಾಹನ ಸಂಚಾರ ಎಲ್ಲವೂ ಸ್ತಬ್ಧವಾಗಿತ್ತು. ನಗರದ ಪ್ರಮುಖ ವೃತ್ತಗಳಲ್ಲಿ ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಿದರಲ್ಲದೆ, ಮುಳಗುಂದ ನಾಕಾ, ಮಹಾತ್ಮ ಗಾಂಧಿ ಸರ್ಕಲ್, ಹಳೆಯ ಡಿಸಿ ಆಫೀಸ್ ವೃತ್ತ, ಭೂಮರಡ್ಡಿ ವೃತ್ತ, ಹುಯಿಲಗೋಳ ನಾರಾಯಣರಾವ್ ವೃತ್ತ, ಬೆಟಗೇರಿ ಬಸ್ ನಿಲ್ದಾಣ ವೃತ್ತ ಸೇರಿದಂತೆ ಅನೇಕ ಕಡೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಂತರ, ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.



