ಚಾಮರಾಜನಗರ: ಮನೆ ನಿರ್ಮಿಸಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅರಣ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿ ನಡೆದಿದೆ.
ಮನೆ ನಿರ್ಮಾಣ ಮಾಡಲು ಸೋಲಿಗ ಜನಾಂಗದ ನಿವಾಸಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಾಲರ್ ವಲಯ ವ್ಯಾಪ್ತಿಯ ಉಪವಲಯ ಅರಣ್ಯಾಧಿಕಾರಿ ಭೋಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಲೆ ಮಹದೇಶ್ವರ ವನ್ಯಜೀವಿ ವಲಯದ ವ್ಯಾಪ್ತಿಯ ಪಾಲಾರ್ ವಲಯದ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೋಜಪ್ಪ ಪಾಲಾರ್ ಗ್ರಾಮದಲ್ಲಿ ಆದಿವಾಸಿ ಕುಟುಂಬಗಳಿಗೆ 18 ಮನೆ ಮಂಜೂರಾಗಿದ್ದು ಎಲ್ಲಾ ಮನೆಯವರು ಅಡಿಪಾಯ ಕಾಮಗಾರಿ ಪೂರ್ಣಗೊಂಡ ನಂತರ ಸರ್ಕಾರದಿಂದ ಮೊದಲ ಕಂತು ಬಿಡುಗಡೆಯಾಗಿದೆ.
ಈ ವೇಳೆ ಮನೆ ನಿರ್ಮಾಣ ಮಾಡುತ್ತಿರುವ ಆದಿವಾಸಿಗಳನ್ನು ನೀವು ಗೋಡೆ ಕಟ್ಟಬೇಡಿ ಎಂದು ಸುಮಾರು ಒಂದು ತಿಂಗಳುಗಳ ಕಾಲ ಕಾಮಗಾರಿಗೆ ಅವಕಾಶ ಮಾಡಿಕೊಟ್ಟಿಲ್ಲ ನಂತರ ನಿವಾಸಿಗಳೆಲ್ಲರೂ ಮನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಾಗ ಪ್ರತಿ ಮನೆಯವರು ಒಂದೊಂದು ಸಾವಿರದಂತೆ 18 ಸಾವಿರ ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.
ಈ ಸಂಬಂಧ ಪಾಲಾರ್ ಗ್ರಾಮದ ಫಲಾನುಭವಿ ಮುರುಗೇಶ್ ಲೋಕಾಯುಕ್ತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದೂರು ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಉಪ ವಲಯ ಅರಣ್ಯ ಅಧಿಕಾರಿ ಭೋಜಪ್ಪ ರವರನ್ನು 18,000 ರೂಪಾಯಿ ಹಣದ ಸಮೇತ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಈ ಸಂಬಂಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.