ಹಾವೇರಿ:- ಜಿಲ್ಲೆಯ ರಾಣೆಬೆನ್ನೂರು ತಹಸೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಫುಡ್ ಇನ್ಸ್ಪೆಕ್ಟರ್ ಲೋಕಾ ಬಲೆಗೆ ಬಿದ್ದಿದ್ದಾರೆ.
ರಾಣೆಬೆನ್ನೂರ ತಹಸೀಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಅಧಿಕಾರಿ ‘ಶಂಭು’ ಲೋಕಾಯುಕ್ತರ ಬಲೆಗೆ ಬಿದ್ದವರು. ನ್ಯಾಯಬೆಲೆ ಅಂಗಡಿ ಪ್ರಾಧಿಕಾರದ ವರ್ಗಾವಣೆಗೆ ಸಂಬಂಧಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಶಂಭು ಮೇಲೆ ಇದೆ. ರಾಘವೇಂದ್ರ ಎಂಬುವವರಿಂದ ಅನುಕಂಪದ ಆಧಾರದ ಮೇಲೆ ವರ್ಗಾವಣೆ ಮಾಡಿಕೊಡುವುದಾಗಿ ಹೇಳಿ ಸುಮಾರು ₹20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಸಂಬಂಧ ದೂರು ಆಧರಿಸಿ ಲೋಕಾಯುಕ್ತ ಅಧಿಕಾರಿ ಎಂ.ಎಸ್. ಕೌಲೆಪುರ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 20,000 ಲಂಚ ಸ್ವೀಕರಿಸುವ ವೇಳೆ ಶಂಭು ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಅಧಿಕಾರಿಗಳು, ತನಿಖೆ ಮುಂದುವರಿಸಿದ್ದಾರೆ.



