ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್ ಡಿ. ಪಾಟೀಲ ಅವರನ್ನು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರಾದ ಅನ್ವರ ಶಿರಹಟ್ಟಿ ಹಾಗೂ ಭಾಷಾಸಾಬ ಮಲ್ಲಸಮುದ್ರ ಒತ್ತಾಯಿಸಿದ್ದಾರೆ.
ಈ ಕುರಿತು ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ವೀಕ್ಷಕರಾಗಿರುವ ಎಐಸಿಸಿ ಕಾರ್ಯದರ್ಶಿ ವಿವೇಕ್ ಬನ್ಸಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸಚಿನ್ ಡಿ. ಪಾಟೀಲ ಅವರು ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ದುಡಿದಿದ್ದಾರೆ. ಗ್ರಾಮ ಪಂಚಾಯಿತಿ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ಹೋಬಳಿ ಮಟ್ಟದಿಂದ ಬೂತ್ಮಟ್ಟದವರೆಗೆ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅನ್ವರ ಶಿರಹಟ್ಟಿ ತಿಳಿಸಿದ್ದಾರೆ.
ವಿಧಾನಸಭೆ, ಲೋಕಸಭೆ, ವಿಧಾನ ಪರಿಷತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಘಟನೆಗೆ ತಮ್ಮದೇ ಆದ ಕಾರ್ಯಕರ್ತರ ಪಡೆಯೊಂದಿಗೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು, ರೈತರು, ದಲಿತರು, ಕೂಲಿ ಕಾರ್ಮಿಕರು, ಮಹಿಳೆಯರು, ದುರ್ಬಲ ವರ್ಗದವರು ಹಾಗೂ ಹಿರಿಯ ನಾಗರಿಕರ ಸಮಸ್ಯೆಗಳನ್ನು ಅರಿತು ಕೆಲಸ ಮಾಡುವ ಸಾಮರ್ಥ್ಯ ಹೊಂದಿರುವ ಸಚಿನ್ ಡಿ. ಪಾಟೀಲ ಅವರಿಗೆ ದೂರದೃಷ್ಟಿಯ ನಾಯಕತ್ವ ಗುಣಗಳಿವೆ. ಸರಳ, ಸಜ್ಜನ ಹಾಗೂ ಎಲ್ಲ ವರ್ಗದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರೆಂಬ ಹೆಗ್ಗಳಿಕೆ ಅವರಿಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ತಳಮಟ್ಟದಿಂದ ಪಕ್ಷ ಸಂಘಟಿಸಿದ ನಿಷ್ಠಾವಂತ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡುವುದರಿಂದ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ. ಸಚಿನ್ ಡಿ. ಪಾಟೀಲರಿಗೆ ಅವಕಾಶ ನೀಡಿದರೆ 2028ರ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಅನುಕೂಲವಾಗಲಿದೆ ಎಂದು ಅನ್ವರ ಶಿರಹಟ್ಟಿ ಹಾಗೂ ಭಾಷಾಸಾಬ ಮಲ್ಲಸಮುದ್ರ ಒತ್ತಾಯಿಸಿದ್ದಾರೆ.



