ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸಮರ್ಪಕ ಬೆಳೆ ಪರಿಹಾರ, ಸಾಲದ ನೆರವು ಹಾಗೂ ಜಾನುವಾರುಗಳ ರಕ್ಷಣೆಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ತಾಲೂಕು ಘಟಕದ ವತಿಯಿಂದ ಸೋಮವಾರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಚನಬಸವಗೌಡ ಪಾಟೀಲ ಹಾಗೂ ರಮೇಶ ಕೋಳಿವಾಡ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಗದಗ ಜಿಲ್ಲೆಯಲ್ಲಿ ಮಾತ್ರ ಕೇವಲ ಒಂದು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಶಿರಹಟ್ಟಿ ತಾಲೂಕು ಕೂಡ ಬರದ ಸಂಕಷ್ಟವನ್ನು ಎದುರಿಸುತ್ತಿದ್ದು, ಕೆರೆ–ಕಟ್ಟೆಗಳು ಹಾಗೂ ಇತರೆ ಜಲಮೂಲಗಳಲ್ಲಿನ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಕೃಷಿ ಚಟುವಟಿಕೆ ಸಂಪೂರ್ಣ ಹಿನ್ನಡೆ ಕಂಡಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.
ಆದ್ದರಿಂದ ಸರ್ಕಾರ ಕೂಡಲೇ ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಬೆಳೆ ನಷ್ಟದ ಪರಿಹಾರ ವಿತರಿಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ಸಾಲದ ನೆರವು ನೀಡುವುದರೊಂದಿಗೆ ಜಾನುವಾರುಗಳ ರಕ್ಷಣೆಗಾಗಿ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಫಕ್ಕೀರೇಶ ಕಟ್ಟಿಮನಿ, ಎಸ್.ವಿ. ನೆಲಗುಡ್ಡದ, ಫಕ್ಕೀರೇಶ ಹೊಸಮನಿ, ಕೃಷ್ಣಸಾಬ ದೊಡ್ಡಮನಿ, ಪೀರಸಾಬ ನದಾಫ, ಎಸ್.ಎನ್. ದಲಾಲಿ, ವೀರಣ್ಣ ಮಜ್ಜಗಿ, ಸುರೇಶ ಸೂರಣಗಿ, ರಾಮನಗೌಡ ಪಾಟೀಲ, ವೀರೇಶ ಶಿವಶಿಂಪಿ, ಫಕ್ಕೀರಗೌಡ ಪಾಟೀಲ, ದೇವಪ್ಪ ಉಪ್ಪಾರ, ಜಿ.ಬಿ. ಹೊಸಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿರಹಟ್ಟಿ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆ–ಕಟ್ಟೆಗಳ ನೀರಿನ ಮಟ್ಟ ಕುಸಿದಿದ್ದು, ಕೃಷಿ ಚಟುವಟಿಕೆ ಹಿನ್ನಡೆ ಕಂಡಿದೆ. ರೈತರ ಸಂಕಷ್ಟವನ್ನು ಪರಿಗಣಿಸಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ನೀಡಬೇಕು.
ಚನಬಸವಗೌಡ ಪಾಟೀಲ ಹಾಗೂ ರಮೇಶ ಕೋಳಿವಾಡ, ರೈತ ಮುಖಂಡರು



