ಆನೇಕಲ್: ಕಣ್ಣು ನೋವಿನ ಕಾರಣ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಉಪನ್ಯಾಸಕರು ತರಗತಿಯಲ್ಲಿ ಅವಮಾನಿಸಿ ಕಿರುಕುಳ ನೀಡಿದ್ದಾರೆ ಎಂದು ಡೆಂಟಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.
ಮೃತಳನ್ನು ಪರಿಮಳ–ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ (23) ಎಂದು ಗುರುತಿಸಲಾಗಿದೆ. ಯಶಸ್ವಿನಿ ಬೊಮ್ಮನಹಳ್ಳಿ ಖಾಸಗಿ ಕಾಲೇಜಿನಲ್ಲಿ Oral Medicine and Radiology ವಿಭಾಗದ ತೃತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದರು ಎಂದು ತಿಳಿದು ಬಂದಿದೆ.
ಬುಧವಾರ (ಜ.7) ಕಣ್ಣು ನೋವಿನಿಂದಾಗಿ ಯಶಸ್ವಿನಿ ಕಾಲೇಜಿಗೆ ರಜೆ ಪಡೆದಿದ್ದರು. ಮಾರನೇ ದಿನ ಕಾಲೇಜಿಗೆ ಹಾಜರಾದಾಗ, “ಯಾವ ಕಣ್ಣಿನ ಡ್ರಾಪ್ಸ್ ಬಳಸಿದ್ದೀಯಾ? ಎಷ್ಟು ಹನಿ ಹಾಕಿಕೊಂಡೆ? ಇಡೀ ಬಾಟಲ್ ಸುರಿದುಕೊಂಡಿದ್ದೀಯಾ?” ಎಂದು ಉಪನ್ಯಾಸಕರು ಸಹಪಾಠಿಗಳ ಮುಂದೆ ಅವಮಾನಿಸಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಆಕೆಗೆ ಸೆಮಿನಾರ್ಗೆ ಅವಕಾಶ ನೀಡದೇ, ರೆಡಿಯಾಲಜಿ ಕೇಸ್ ನೀಡದೆ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಮೃತ ವಿದ್ಯಾರ್ಥಿನಿಯ ತಾಯಿ ಮಾತನಾಡಿ, “ನನ್ನ ಮಗಳಿಗೆ ಕಣ್ಣಿಗೆ ಗಾಯವಾಗಿದ್ದರಿಂದ ನನಗೆ ತಿಳಿಸಿ ರಜೆ ತೆಗೆದುಕೊಂಡಿದ್ದಳು. ಆದರೂ ಉಪನ್ಯಾಸಕರು ವಿದ್ಯಾರ್ಥಿಗಳ ಮುಂದೆ ಅವಮಾನಿಸಿದ್ದಾರೆ. ಉಪನ್ಯಾಸಕರಷ್ಟೇ ಅಲ್ಲ, ಕಾಲೇಜು ಆಡಳಿತ ಮಂಡಳಿಯಿಂದಲೂ ಕಿರುಕುಳ ನೀಡಲಾಗಿದೆ. ಇದನ್ನೆಲ್ಲ ಸಹಿಸಿಕೊಳ್ಳಲಾಗದೆ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ” ಎಂದು ಆರೋಪಿಸಿದರು.
ಘಟನೆಗೆ ಕಾರಣರಾದ ಪ್ರಾಂಶುಪಾಲರು ಹಾಗೂ ಅವಮಾನ ಮಾಡಿದ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಯಶಸ್ವಿನಿಯ ಸಹಪಾಠಿಗಳು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದರು.ಘಟನೆ ಸಂಬಂಧ ಚಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



