ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರವಲಯದಲ್ಲಿ ಕದ್ದ ಕಪ್ಪು ಬಣ್ಣದ ಪಲ್ಸರ್ ಬೈಕ್ನಲ್ಲಿ ಬಂದ ಇಬ್ಬರು ಖದೀಮರು ಸರಣಿ ಸರಗಳ್ಳತನ ನಡೆಸಿದ್ದಾರೆ.
ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಖದೀಮರು ನೆಲಮಂಗಲದಲ್ಲಿ ಕಪ್ಪು ಬಣ್ಣದ ಪಲ್ಸರ್ ಬೈಕ್ ಕಳವು ಮಾಡಿ ಅದೇ ಬೈಕ್ನಲ್ಲಿ ಸರಗಳ್ಳತನ ನಡೆಸಿದ್ದಾರೆ. ಹೊಸಕೋಟೆ ಹಾಗೂ ದೇವನಹಳ್ಳಿ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದು, ನಂದಗುಡಿ, ಸೂಲಿಬೆಲೆ ಹಾಗೂ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ.
ಮಾಲೂರು ಹಾಗೂ ದೇವನಹಳ್ಳಿ ಭಾಗದಲ್ಲೂ ಸರಗಳ್ಳತನಕ್ಕೆ ಖದೀಮರು ಯತ್ನಿಸಿದ್ದಾರೆ. ಆದರೆ ಈ ಎರಡೂ ಕಡೆ ಕೃತ್ಯ ವಿಫಲವಾಗಿದೆ.
ಸರಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಪೀಣ್ಯ ವ್ಯಾಪ್ತಿಯಲ್ಲಿ ಬೈಕ್ನಲ್ಲಿ ಬಂದ ಖದೀಮರು ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ಆರೋಪಿಗಳು ಏಕಾಏಕಿ ದಾಳಿ ನಡೆಸಿ ನೆಲಕ್ಕೆ ಬೀಳಿಸಿ ಮಾಂಗಲ್ಯ ಸರ ಕಿತ್ತುಕೊಂಡಿದ್ದರು. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



