ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಉದ್ಯೋಗ ಕ್ಷೇತ್ರದ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಲು ವಿದ್ಯಾರ್ಥಿಗಳು ತಾಂತ್ರಿಕ ಜ್ಞಾನದ ಜೊತೆಗೆ ಸಂವಹನ ಕೌಶಲ್ಯ, ಸಮಸ್ಯೆ ಪರಿಹಾರ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆಯ ಪ್ರಾದೇಶಿಕ ಪ್ರತಿಭಾ ನೇಮಕಾತಿ ವಿಭಾಗದ ಮುಖ್ಯಸ್ಥ ಕಿರಣ್ ಕುಮಾರ್ ಹೇಳಿದರು.
ಪಟ್ಟಣದ ಶ್ರೀ ವೆಂಕಪ್ಪ ಎಂ. ಅಗಡಿ ಮತ್ತು ಶ್ರೀಮತಿ ಕಮಲಾ ವೆಂ. ಅಗಡಿ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ನಿಯೋಜನಾ ವಿಭಾಗ ಆಯೋಜಿಸಿದ್ದ ‘ಟೆಕ್-ಟು-ಕಾರ್ಪೊರೇಟ್–2026’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ನೇಮಕಾತಿ ಪ್ರಕ್ರಿಯೆಯಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿಗಳು ಸಂದರ್ಶನಕ್ಕೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರಂತರ ಕಲಿಕೆ ಮತ್ತು ಕೌಶಲ್ಯ ವೃದ್ಧಿಯೇ ಯಶಸ್ಸಿನ ಮಂತ್ರ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪರಶುರಾಮ ಬಾರ್ಕಿ ವಹಿಸಿದ್ದರು. ಡೀನ್ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ತರಬೇತಿ ಮತ್ತು ಉದ್ಯೋಗ ನಿಯೋಜನಾ ವಿಭಾಗದ ಸಂಯೋಜಕರು, ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಹಾವಿದ್ಯಾಲಯದ ವಿವಿಧ ವಿಭಾಗಗಳಿಂದ 28 ತಂಡಗಳು ಭಾಗವಹಿಸಿ, ಕೈಗಾರಿಕಾ ಕ್ಷೇತ್ರದ ಸಮಸ್ಯೆಗಳಿಗೆ ನವೀನ ಮತ್ತು ಪ್ರಾಯೋಗಿಕ ಪರಿಹಾರಗಳನ್ನು ಪ್ರಸ್ತುತಪಡಿಸಿದವು. ವಿದ್ಯಾರ್ಥಿಗಳ ಸೃಜನಶೀಲತೆ, ತಂಡದ ಕಾರ್ಯಪದ್ಧತಿ, ಸಂವಹನ ಕೌಶಲ್ಯ ಹಾಗೂ ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲಾಯಿತು.
“ತಾಂತ್ರಿಕ ಜ್ಞಾನದ ಜೊತೆಗೆ ಕೌಶಲ್ಯ, ಆತ್ಮವಿಶ್ವಾಸ ಮತ್ತು ಉತ್ತಮ ಸಂವಹನ ಸಾಮರ್ಥ್ಯ ಹೊಂದಿದ ವಿದ್ಯಾರ್ಥಿಗಳೇ ಕಾರ್ಪೊರೇಟ್ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಲ್ಲರು.”
ಕಿರಣ್ ಕುಮಾರ್, ಟಿಸಿಎಸ್



