ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ಬಂದಿಳಿದಿರುವ ಶಂಕೆ ವ್ಯಕ್ತವಾಗಿದ್ದು, ಹೌರಾ ಎಕ್ಸ್ಪ್ರೆಸ್ ರೈಲಿನ ಮೂಲಕ ಆಗಮಿಸಿದ 40ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಘಟನೆ ಶನಿವಾರ ನಡೆದಿದೆ.
ಕೋಲ್ಕತ್ತಾದಿಂದ ವಾರಕ್ಕೊಮ್ಮೆ ಮೈಸೂರಿಗೆ ಆಗಮಿಸುವ ಹೌರಾ ಎಕ್ಸ್ಪ್ರೆಸ್ ರೈಲು ಬೆಳಿಗ್ಗೆ ನಗರ ತಲುಪಿದ ವೇಳೆ, ರೈಲಿನಿಂದ ಇಳಿದ ಕಾರ್ಮಿಕರ ಗುಂಪಿನ ಚಲನವಲನಗಳ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಅವರನ್ನು ತಡೆದು ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಹಲವರ ಬಳಿ ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳು ಪತ್ತೆಯಾಗಿವೆ. ಆದರೆ, ಈ ದಾಖಲೆಗಳು ನಕಲಿಯಾಗಿರುವ ಸಾಧ್ಯತೆಯಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದು, ಇವರೆಲ್ಲರೂ ಅಕ್ರಮವಾಗಿ ಭಾರತ ಪ್ರವೇಶಿಸಿರುವ ಬಾಂಗ್ಲಾದೇಶಿ ವಲಸಿಗರಾಗಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ರೈಲಿನಿಂದ ಇಳಿದ ಕೆಲವರು ನಗರದ ವಿವಿಧ ಭಾಗಗಳಿಗೆ ತೆರಳಲು ಯತ್ನಿಸಿದ್ದರೆ, ಕೆಲವರು ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೆಂದು ತಿಳಿದುಬಂದಿದೆ.
ವಿಚಾರಣೆ ವೇಳೆ ಕೆಲವರು ಪರಸ್ಪರ ವಿರೋಧಾಭಾಸದ ಮಾಹಿತಿಯನ್ನು ನೀಡಿದ್ದು, ಮೈಸೂರಿನಿಂದ ಕೊಡಗು, ಪಿರಿಯಾಪಟ್ಟಣ ಹಾಗೂ ಕೇರಳದ ವಿವಿಧ ಭಾಗಗಳಿಗೆ ಕೆಲಸದ ನಿಮಿತ್ತ ತೆರಳಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಎಲ್. ನಾಗೇಂದ್ರ, ಪಶ್ಚಿಮ ಬಂಗಾಳದಿಂದ ಅಕ್ರಮ ವಲಸಿಗರು ರಾಜ್ಯಕ್ಕೆ ಪ್ರವೇಶಿಸುತ್ತಿದ್ದಾರೆ ಎಂಬ ಆರೋಪ ಮಾಡಿದ್ದು, ನಕಲಿ ದಾಖಲೆಗಳ ಮೂಲಕ ರಾಜ್ಯದ ವಿವಿಧ ಭಾಗಗಳಿಗೆ ತೆರಳುತ್ತಿರುವವರ ಮೇಲೆ ಸರ್ಕಾರ ಕಣ್ಣಿಡಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರವು ಅಕ್ರಮ ವಲಸೆಯನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಘಟನೆಯು ಮೈಸೂರಿನಲ್ಲಿ ಸಾರ್ವಜನಿಕರು ಹಾಗೂ ಭದ್ರತಾ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ವಶಕ್ಕೆ ಪಡೆದಿರುವವರು ನಿಜವಾಗಿಯೂ ಬಾಂಗ್ಲಾದೇಶದ ಅಕ್ರಮ ವಲಸಿಗರೇ ಅಥವಾ ಪಶ್ಚಿಮ ಬಂಗಾಳದ ಕಾರ್ಮಿಕರೇ ಎಂಬುದು ಪೊಲೀಸರ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ಸದ್ಯ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.



