ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪದೇ ಪದೇ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ನಗರದಲ್ಲಿ ತೀವ್ರ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮಾತನಾಡಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಳವಾಗುತ್ತಿದ್ದು, ಅದರ ಪರಿಣಾಮವಾಗಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ ಎಂದು ಆರೋಪಿಸಿದರು.
“ರೈತರು ಕೃಷಿ ಚಟುವಟಿಕೆಗಳಿಗೆ ಬಳಸುವ ಡೀಸೆಲ್ ದುಬಾರಿಯಾಗುವುದರಿಂದ ಕೃಷಿ ವೆಚ್ಚ ಹೆಚ್ಚಲಿದೆ. ಮಧ್ಯಮ ವರ್ಗ, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಹಾಗೂ ಆಟೋ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ” ಎಂದು ಅವರು ಹೇಳಿದರು.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿದಿದ್ದರೂ ದೇಶದಲ್ಲಿ ಅದರ ಪ್ರಯೋಜನ ಜನರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದ ಅವರು, “ಎಕ್ಸೈಸ್ ಸುಂಕದ ಹೆಸರಿನಲ್ಲಿ ಕೇಂದ್ರ ಸರ್ಕಾರ ಲಕ್ಷಾಂತರ ಕೋಟಿ ರೂಪಾಯಿ ಸಂಗ್ರಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಲೆಕ್ಕವನ್ನು ದೇಶದ ಜನರ ಮುಂದೆ ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದರು.
ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಸೀತಾರಾಮ್ ಗುಂಡಪ್ಪ, ಜನರ ಸಮಸ್ಯೆಗಳ ಬಗ್ಗೆ ಸರ್ಕಾರ ಯಾವುದೇ ಕಾಳಜಿ ತೋರಿಸುತ್ತಿಲ್ಲ ಎಂದು ಟೀಕಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಮಾತನಾಡಿ, “ಅಚ್ಛೇ ದಿನ್ ಎಂಬ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇಂದು ಜನರನ್ನು ಬೆಲೆ ಏರಿಕೆಯ ಬೆಂಕಿಗೆ ತಳ್ಳಿದೆ” ಎಂದು ವಾಗ್ದಾಳಿ ನಡೆಸಿದರು.
ನಿರುದ್ಯೋಗ, ತೆರಿಗೆ ಭಾರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಜೀವನ ದುಸ್ತರವಾಗಿದ್ದರೂ, ಸರ್ಕಾರ ಕಾರ್ಪೊರೇಟ್ ಪರ ನೀತಿಗಳಲ್ಲೇ ತೊಡಗಿದೆ ಎಂದು ಆರೋಪಿಸಿದರು.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ತಕ್ಷಣ ಕಡಿತಗೊಳಿಸಿ, ಇಂಧನ ದರ ಏರಿಕೆಯನ್ನು ಹಿಂಪಡೆಯಬೇಕು. ಜೊತೆಗೆ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಲಕ್ಷ್ಮಿಕಾಂತ್ ರಾವ್, ಜಗದೀಶ್ ಚಂದ್ರ, ಶಶಿಧರ್ ಆರಾಧ್ಯ, ಅಶೋಕ್ ಮೃತ್ಯುಂಜಯ, ಪುಟ್ಟಣ್ಣ ಗೌಡ, ಮಧುಮಿತಾ, ಪ್ರಭಾವತಿ, ಪುಷ್ಪ ಕೇಶವ್, ಶುಭ ಗುತ್ತೇದಾರ, ಇರ್ಷಾದ್ ಖಾನ್, ಅಣ್ಣ ನಾಯಕ್, ಉಮೇಶ್ ಯಾದವ್, ದಿಲೀಪ್ ಕುಮಾರ್ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.



