ಗದಗ: ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಬದಲಾವಣೆಯ ಮೂಲಕ ಹೊಸ ರಾಜಕೀಯ ನಾಟಕಕ್ಕೆ ನಾಂದಿ ಹಾಡಿದ್ದು, ಹೊಸ ಸಚಿವ ಸಂಪುಟ ರಚನೆಯಾದ ಕೆಲವೇ ದಿನಗಳಲ್ಲಿ ಭಿನ್ನಮತ ಸ್ಫೋಟಗೊಂಡಿರುವುದು ಸರ್ಕಾರದ ಅಸ್ಥಿರತೆಯ ಸೂಚಕವಾಗಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಮಾಣವಚನ ಸ್ವೀಕರಿಸಿದ 14 ಸಚಿವರಲ್ಲೇ ಈಗಾಗಲೇ ಕೆಲವರು ಅಸಮಾಧಾನ ಹೊರಹಾಕಿರುವುದು ಸರ್ಕಾರದ ಒಳಜಗಳವನ್ನು ಬಹಿರಂಗಪಡಿಸಿದೆ ಎಂದು ಆರೋಪಿಸಿದರು. ಉಳಿದ ಶಾಸಕರಲ್ಲೂ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು, ಹೊಸ ಕಾಂಗ್ರೆಸ್ಸಿಗರು, ವಿವಿಧ ಗುಂಪುಗಳ ರಾಜಕಾರಣ ಜೋರಾಗಿದ್ದು, ಇದು ಪಕ್ಷದ ಪತನಕ್ಕೆ ಕಾರಣವಾಗಲಿದೆ ಎಂದು ಗೋವಿಂದಗೌಡ್ರ ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಮುಂಗಾರು ಆರಂಭವಾಗಿರುವ ಈ ಸಂದರ್ಭದಲ್ಲಿ ರೈತರಿಗೆ ಸಮರ್ಪಕ ಬೀಜ ಮತ್ತು ಗೊಬ್ಬರ ಪೂರೈಕೆಯತ್ತ ಸರ್ಕಾರ ಗಮನ ಹರಿಸಬೇಕಿತ್ತು. ಆದರೆ ಕಾಂಗ್ರೆಸ್ ನಾಯಕರು ಆಂತರಿಕ ಕಚ್ಚಾಟ ಮತ್ತು ಅಧಿಕಾರದ ರಾಜಕಾರಣದಲ್ಲಿ ತೊಡಗಿರುವುದು ರೈತರ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂದು ಅವರು ಆರೋಪಿಸಿದರು.
ಮುಂಗಾರು ಹಿನ್ನೆಲೆಯಲ್ಲಿ ಜನ, ಜಾನುವಾರು ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆದರೆ ಆಡಳಿತ ಪಕ್ಷದ ಶಾಸಕರು ಅಧಿಕಾರದ ಲೆಕ್ಕಾಚಾರಕ್ಕಾಗಿ ಕ್ಷೇತ್ರಗಳನ್ನು ಬಿಟ್ಟು ಬೆಂಗಳೂರು ಹಾಗೂ ದೆಹಲಿಗೆ ಸುತ್ತಾಟ ನಡೆಸುತ್ತಿರುವುದು ದುಃಖಕರ ಬೆಳವಣಿಗೆ ಎಂದು ಟೀಕಿಸಿದರು.
ಮಳೆಯಿಂದ ಯಾವುದೇ ಅನಾಹುತ ಸಂಭವಿಸಿದರೆ ಅದರ ನೈತಿಕ ಹೊಣೆಗಾರಿಕೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗುತ್ತದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಎಚ್ಚರಿಸಿದರು.



