ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕಳೆದ ವರ್ಷ ಜಾನುವಾರುಗಳಿಗೆ ಅಂಟಿದ್ದ ಚರ್ಮಗಂಟು ಕಾಯಿಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜಾನುವಾರುಗಳಿಗೆ ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ ಯೋಜನೆಯಡಿಯಲ್ಲಿ ತಾಲೂಕಿನಾದ್ಯಂತ ಜಾನುವಾರುಗಳಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮವನ್ನು ಜೂನ್ 20ರಿಂದ ಜುಲೈ 27ರವರೆಗೆ ಆಯೋಜಿಸಲಾಗಿದೆ ಎಂದು ಪಶು ವೈದ್ಯಾಧಿಕಾರಿ ಡಾ. ನೀಲಕಂಠ ಹವಳದ ಹೇಳಿದರು.
ಅವರು ಪಟ್ಟಣದ ರೈತರ ಮನೆ ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಉಚಿತ ಲಸಿಕೆಯನ್ನು ನೀಡಿ ರೈತರಿಗೆ ಈ ಕುರಿತು ಮಾಹಿತಿ ನೀಡಿದರು. ಚರ್ಮಗಂಟು ಕಾಯಿಲೆ ಬಹಳಷ್ಟು ಜಾನುವಾರುಗಳಿಗೆ ಹಾನಿಯುಂಟು ಮಾಡಿತ್ತು. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಉಚಿತ ಲಸಿಕೆ ನೀಡುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಕಾರ್ಯಕ್ರಮ ಒಂದು ತಿಂಗಳ ಕಾಲ ನಡೆಯಲಿದೆ. ತಾಲೂಕಿನಾದ್ಯಂತ ರೈತರ ಮನೆಗಳಿಗೆ ಲಸಿಕಾಕಾರರು ಬಂದು ಜಾನುವಾರುಗಳಿಗೆ ಲಸಿಕೆ ಹಾಕುತ್ತಾರೆ. ರೈತರು ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತರಾದ ಕುಬೇರಪ್ಪ ಮಹಾಂತಶೆಟ್ಟರ, ಸುನೀಲ ಮಹಾಂತಶೆಟ್ಟರ, ಪಶು ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.