ವಿಜಯಸಾಕ್ಷಿ ಸುದ್ದಿ, ಗದಗ : ತುಂಗಭದ್ರಾ ನದಿಯ ನೀರಿನ ಹರಿವು ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯ ಹಮ್ಮಿಗಿ ಬ್ಯಾರೇಜ್ ಹಿನ್ನೀರು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಮ್ಮಿಗಿ, ವಿಠಲಾಪುರ, ಗುಮ್ಮಗೋಳ, ಬೀದರಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ, ನದಿ ಪಾತ್ರದ ಸಾರ್ವಜನಿಕರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಬೇಕು. ಯಾವುದೇ ರೀತಿಯ ಜನ, ಜಾನುವಾರು ಜೀವ ಹಾನಿಯಾಗದಂತೆ ನಿಗಾವಹಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನದಿಯ ಹತ್ತಿರ ಮಕ್ಕಳು, ಜಾನುವಾರುಗಳು ತೆರಳದಂತೆ ಜಾಗೃತಿ ಮೂಡಿಸಿ, ಸಾರ್ವಜನಿಕರ ಆಸ್ತಿ ಹಾನಿಯಾಗದಂತೆ ರಕ್ಷಿಸಿಕೊಳ್ಳಲು ತಿಳಿಸಬೇಕು ಎಂದರು ಸೂಚಿಸಿದರು.
ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಉಪಸ್ಥಿತರಿದ್ದು, ಸ್ಥಳೀಯ ಅಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಈ ವೇಳೆ ಮುಂಡರಗಿ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಇನ್ಸ್ಪೆಕ್ಟರ್, ಸಿಂಗಟಾಲೂರ ಏತ ನೀರಾವರಿ ಕಾರ್ಯಪಾಲಕ ಅಭಿಯಂತರರು ಹಾಗೂ ಸಾರ್ವಜನಿಕರು ಹಾಜರಿದ್ದರು.
ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಯಲ್ಲಿ ವಾಸಿಸುವವರು ಸುರಕ್ಷತೆಗೆ ಆದ್ಯತೆ ವಹಿಸಬೇಕು. ವಿದ್ಯುತ್ ಕಂಬ, ತಂತಿಗಳಿಗೆ ಜಾನುವಾರುಗಳನ್ನು ಕಟ್ಟಬಾರದು ಹಾಗೂ ಸಾರ್ವಜನಿಕರು ವಿದ್ಯುತ್ ಕಂಬ ಅಥವಾ ತಂತಿಗಳನ್ನು ಸ್ಪರ್ಶಿಸಬಾರದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸಾರ್ವಜನಿಕರಿಗೆ ಸೂಚನೆ ನೀಡಿದರು.