ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲೆಯಲ್ಲಿ ಉತ್ತಮ ಮಳೆ ಆಗಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಬೇಕು. ಸರಕಾರದಿಂದ ಕೃಷಿ ಸಂಬಂಧಿತ ಎಲ್ಲ ಸೌಲಭ್ಯಗಳನ್ನು ಪಡೆಯಲು ಪ್ರತಿ ರೈತ ಪ್ರೂಟ್ ಐಡಿ ಹೊಂದುವುದು ಕಡ್ಡಾಯವಾಗಿದ್ದು, ರೈತರಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರೂಟ್ ಐಡಿ ಹೊಂದಲು ಜಿಲ್ಲೆಯಾದ್ಯಂತ ಅಭಿಯಾನ ಹಮ್ಮಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಸಚಿವರೂ ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಅವರು ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ಮಾತನಾಡಿದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ರೈತರಿಗೆ ಬೀಜ ದರ ಹೆಚ್ಚಳ ಬಗ್ಗೆ ತಿಳುವಳಿಕೆ ನೀಡಬೇಕು ಮತ್ತು ಹೊಸ ತಳಿ ಬೀಜಗಳನ್ನು ರೈತರಿಗೆ ಪರಿಚಯಿಸಿ, ವಿತರಿಸಲು ಕ್ರಮ ಕೈಗೊಳ್ಳಬೇಕು. ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಗಳಿಗೆ ರೈತರ ಫ್ರೂಟ್ಸ್ ಐಡಿ ಸೃಜಿಸಲು ಸೂಕ್ತ ನಿರ್ದೇಶನ ನೀಡಬೇಕೆಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಜಿಲ್ಲೆಯ 14 ರೈತ ಸಂಪರ್ಕ ಕೇಂದ್ರಗಳ ಜೊತೆಗೆ ಹೆಚ್ಚುವರಿ ಕೇಂದ್ರಗಳನ್ನು ತೆರೆದು ರೈತರಿಗೆ ಸಕಾಲದಲ್ಲಿ ಬೀಜ, ಗೊಬ್ಬರ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಪ್ರತಿ ರೈತರ ಆರ್.ಟಿ.ಸಿಗೆ ಆಧಾರ್ ಜೋಡಣೆ ಕಾರ್ಯ ನಡೆದಿದೆ. ಇದರೊಂದಿಗೆ ರೈತರು ಫ್ರೂಟ್ಸ್ ಐಡಿ ಹೊಂದುವಂತೆ ತಿಳುವಳಿಕೆ ನೀಡಿ, ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ವೇದಿಕೆಯಲ್ಲಿದ್ದರು.
ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಪ್ರತಿ ರೈತ ಫ್ರೂಟ್ಸ್ ಐಡಿ ಹೊಂದುವುದು ಅಗತ್ಯವಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಶೇ. 76ರಷ್ಟು ರೈತರು ಫ್ರೂಟ್ಸ್ ಐಡಿ ಹೊಂದಿದ್ದಾರೆ. ಉಳಿದ ರೈತರು ಫ್ರೂಟ್ಸ್ ಐಡಿ ಹೊಂದುವಂತೆ ಜಾಗೃತಿ ಮೂಡಿಸಿ, ಪ್ರಗತಿ ಸಾಧಿಸಲು ರೈತರ ಜಾಗೃತಿಗಾಗಿ ಅಭಿಯಾನ ಹಮ್ಮಿಕೊಳ್ಳಬೇಕೆಂದು ಸಚಿವ ಸಂತೋಷ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.