Home Gadag News 18ನೇ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

18ನೇ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

0
18ನೇ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನವನ್ನು ಆಯೋಜಿಸಲಾಗುತ್ತಿದೆ. 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಈಗಾಗಲೇ 17 ಜನತಾ ದರ್ಶನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿವೆ. ಇಂದು 18ನೇ ಜನತಾ ದರ್ಶನ ನಡೆಯುತ್ತಿದೆ ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.

ಮಂಗಳವಾರ ಕಲಘಟಗಿಯ ಬಮ್ಮಿಗಟ್ಟಿ ಕ್ರಾಸ್ ಹತ್ತಿರದ ಪಟ್ಟಣ ಪಂಚಾಯಿತಿಯ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನರು ಸಾಕಷ್ಟು ಸಮಸ್ಯೆಗಳನ್ನು ಜನತಾ ದರ್ಶನದಿಂದ ಪರಿಹರಿಸಿಕೊಂಡಿದ್ದಾರೆ. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದರೆ, ಇತರ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳು ಕಡಿಮೆ ಸಮಯದಲ್ಲೇ ಬಗೆಹರಿಸಿವೆ. ವಿಧವಾ ವೇತನ, ವೃದ್ಧಾಪ್ಯ ವೇತನ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಭೂಮಿ ಒತ್ತುವರಿ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ, ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಜನತಾ ದರ್ಶನ ಸಹಾಯಕವಾಗಿದೆ ಎಂದರು.

ಶಂಕರ ರಾಮು ಲಮಾಣಿ ಅವರು ತಮ್ಮ ಆಸ್ತಿ ಇ-ಸ್ವತ್ತು ಮಾಡಿಕೊಳ್ಳಲು ಒಂದು ವರ್ಷದಿಂದ ಅಲೆದಾಟ ಮಾಡುತ್ತಿದ್ದೇನೆ ಎಂದು ಸಚಿವರಲ್ಲಿ ಮನವಿ ಮಾಡಿದರು. ರೇಣುಕಾ ದೇವೇಂದ್ರ ಲಮಾಣಿ ಅವರು ಹೈನುಗಾರಿಕೆ ಯೋಜನೆಗೆ ಅರ್ಜಿ ಹಾಕಲಾಗಿದೆ. ಆದರೆ ಒಂದು ವರ್ಷವಾದರೂ ಸಹ ಯೋಜನೆಗೆ ಆಯ್ಕೆ ಮಾಡಿಲ್ಲ ಎಂದು ಮನವಿ ಮಾಡಿದರು. ಜಿನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ಒಂದು ವರ್ಷದಿಂದ ಕುಡಿಯುವ ನೀರು, ವಿದ್ಯುತ್ ಹಾಗೂ ಯಾವುದೇ ಕನಿಷ್ಠ ಸೌಲಭ್ಯಗಳು ಇಲ್ಲವಾಗಿವೆ. ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಸಚಿವರಲ್ಲಿ ಮನವಿ ಸಲ್ಲಿಸಿದರು. ಸಮಸ್ಯೆ ಕುರಿತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷರಾದ ಎಸ್.ಆರ್. ಪಾಟೀಲ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ್, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ವೈಷ್ಣವಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಸಂತೋಷ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಾಡಗೀತೆ ಪ್ರಸ್ತುತಪಡಿಸಿದರು. ಉಪ ವಿಭಾಗಾಧಿಕಾರಿ ಶಾಲಂ ಹುಸೇನ್ ಸ್ವಾಗತಿಸಿದರು.

ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹೊರ ಗುತ್ತಿಗೆದಾರ ನೌಕರರಾಗಿ ಕೆಲಸ ಮಾಡುತ್ತಿರುವ ಪರಶುರಾಮ್ ಪಾಟೀಲ ಅವರು 3-4 ತಿಂಗಳಿಂದ ಸಂಬಳ ವಿಳಂಬವಾಗಿದೆ ಎಂದು ಸಚಿವರಲ್ಲಿ ಅಳಲು ತೋಡಿಕೊಂಡರೆ, ಮಾವಿನಕೊಪ್ಪ ಗ್ರಾಮದ ರೆಹಮಾನ ಖಾದರಸಾಬ್ ನದಾಫ್ ಅವರು ಅರಣ್ಯ ಇಲಾಖೆಯಿಂದ ಕೃಷಿ ಭೂಮಿ ಅತಿಕ್ರಮಣವಾಗಿದೆ ಎಂದು ಸಚಿವರಲ್ಲಿ ಮನವಿ ಮಾಡಿದರು. ತಕ್ಷಣ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಸೂಚಿಸಿದರು.

 


Spread the love

LEAVE A REPLY

Please enter your comment!
Please enter your name here