ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆಯ ಅಗತ್ಯವಿದೆ

0
District level meeting related to administrative reform
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಆಡಳಿತದಲ್ಲಿ ಸರಳತೆ ಮತ್ತು ಜನಸ್ನೇಹಿಯಾಗಿದ್ದಾಗ ಮಾತ್ರ ಸರಕಾರದ ಜನಕಲ್ಯಾಣ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಲು ಸಾಧ್ಯವಾಗುತ್ತದೆ.

Advertisement

ಆಡಳಿತದಲ್ಲಿ ಸುಧಾರಣೆಯೊಂದಿಗೆ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರುವುದು ಅಗತ್ಯವಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ ಹೇಳಿದರು.

ಅವರು ಬುಧವಾರ ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಜಿಲ್ಲಾಮಟ್ಟದ ಅಧಿಕಾರಿಗಳ ಮತ್ತು ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಮತ್ತು ಸಲಹೆ ಪಡೆಯುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಲ್ಯಾಣ ರಾಜ್ಯ ಕಟ್ಟುವುದು ಇಂದಿನ ಸರಕಾರಗಳ ಗುರಿ. ಆಡಳಿತವು ಪಾರದರ್ಶಕವಾಗಿ ಮತ್ತು ಜನಸ್ನೇಹಿಯಾಗಿ ಇದ್ದರೆ ಮಾತ್ರ ಇದು ಸಾಧ್ಯವಾಗುತ್ತದೆ. ಆಡಳಿತ ವ್ಯವಸ್ಥೆ ಸರಳವಾಗಿದ್ದರೆ ಜನರಿಗೆ ಸರ್ಕಾರಿ ಯೋಜನೆಗಳ ಲಾಭ ಬೇಗ ತಲುಪುತ್ತದೆ ಎಂದು ಅವರು ಹೇಳಿದರು.

ಕಂದಾಯ ಇಲಾಖೆಯ ತಹಸೀಲ್ದಾರ ಹುದ್ದೆಯ ಕಾರ್ಯಭಾರ ಅತಿಯಾಗಿದೆ. ದಿನನಿತ್ಯದ ಆಡಳಿತದ ಜೊತೆಗೆ ಪ್ರೊಟೊಕಾಲ್ ಡ್ಯೂಟಿ, ಇತರ ಕೆಲಸಗಳು ಆಡಳಿತದ ಮೇಲೆ ಒತ್ತಡ ತರುತ್ತವೆ. ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಕೆಲವು ಇಲಾಖೆಗಳಲ್ಲಿ ಕಾರ್ಯಭಾರ ಕಡಿಮೆ ಇರುವ ಹುದ್ದೆಗಳು ಮುಂದುವರಿದಿರುವದರಿಂದ ಕೆಲವು ಸಲ ಆಡಳಿತದಲ್ಲಿ ವಿಳಂಬತೆ, ನಿಧಾನಗತಿ ಕಾಣಿಸುತ್ತದೆ.

ಹೆಚ್ಚುವರಿ ಹುದ್ದೆಗಳ ಸೃಷ್ಟಿ ಮಾಡುವ ಜೊತೆಗೆ, ಈಗಾಗಲೇ ಕೆಲವು ಇಲಾಖೆಗಳಲ್ಲಿ ಹೆಚ್ಚುವರಿ ಆಗಿ ಇರುವ ಹುದ್ದೆಗಳನ್ನು ರದ್ದು ಪಡಿಸುವ ಬಗ್ಗೆಯೂ ಮಾಹಿತಿ ನೀಡಬೇಕು. ಈ ಎಲ್ಲ ಮಾಹಿತಿಯುಳ್ಳ ಅಧಿಕಾರಿಗಳ ಅಭಿಪ್ರಾಯವೂ ಆಡಳಿತ ಸುಧಾರಣೆಯಲ್ಲಿ ಮುಖ್ಯವಾಗಿದೆ ಎಂದರು.

ಆಡಳಿತ ಸುಧಾರಣಾ ಆಯೋಗದ ಕಾರ್ಯದರ್ಶಿ ಎನ್.ಎಸ್. ಪ್ರಸನ್ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಸ್ವಾಗತಿಸಿ, ಆಡಳಿತ ಸುಧಾರಣಾ ಸಭೆಯ ಸಮನ್ವಯ ಮಾಡಿ, ಆಡಳಿತ ನಿರ್ವಹಣೆಯಲ್ಲಿ ಕಂದಾಯ ಹಾಗೂ ಇತರ ಪ್ರಮುಖ ಇಲಾಖೆಗಳಲ್ಲಿನ ಅಡಚಣೆಗಳನ್ನು ವಿವರಿಸಿದರು.

ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಮಹಾನಗರ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಆಯೋಗದ ವಿಶೇಷ ಕಾರ್ಯದರ್ಶಿ ರಮೇಶಕುಮಾರ ದೇಸಾಯಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ವೇದಿಕೆಯಲ್ಲಿದ್ದರು.

ಸಭೆಯಲ್ಲಿ ಕಂದಾಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಕೌಶಲ್ಯ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಸುಮಾರು 57 ಇಲಾಖೆಯ ಅಧಿಕಾರಿಗಳು ಭಾಗವಹಿಸಿ, ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ತೊಂದರೆಗಳು ಮತ್ತು ಸುಧಾರಣಾ ಕ್ರಮಗಳ ಕುರಿತು ತಮ್ಮ ಅಭಿಪ್ರಾಯ ಮಂಡಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್. ಮುಗನೂರಮಠ, ಉಪ ಪೊಲೀಸ್ ಆಯುಕ್ತ ಮಹಾಲಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಭರಮನಿ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಜಿಲ್ಲಾ ನಗರಾಭಿವೃದ್ಧಿಕೋಶದ ಪ್ರಭಾರ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಡಿಎಚ್.ಓ ಡಾ. ಶಶಿ ಪಾಟೀಲ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಡಿಡಿಪಿಯು ಸುರೇಶ ಕೆ.ಪಿ., ಪಶುವೈದ್ಯಕೀಯ ಡಿ.ಡಿ ಡಾ.ರವಿ ಸಾಲಿಗೌಡರ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇಂದಿನ ಸರಕಾರಗಳು ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಜನರ ದಿನನಿತ್ಯದ ಜೀವನಮಟ್ಟ ಸುಧಾರಣೆಗೆ ಹೆಚ್ಚು ಒತ್ತು ನೀಡುತ್ತಿವೆ. ಸಕಾಲ ಕಾಯ್ದೆ ಅನುಷ್ಠಾನಕ್ಕೆ ಬಂದಿದ್ದರೂ ಅನೇಕ ಯೋಜನೆಗಳಲ್ಲಿ ಅನಗತ್ಯ ದಾಖಲಾತಿಗಳ ಗೊಂದಲದಿಂದಾಗಿ ವಿಳಂಬವಾಗುತ್ತಿವೆ. ಇದಕ್ಕೆ ಆಡಳಿತದ ವಿವಿಧ ಹಂತಗಳಲ್ಲಿ ಬದಲಾವಣೆ ಅಗತ್ಯವಾಗಿದೆ ಎಂದು ಆರ್.ವಿ. ದೇಶಪಾಂಡೆ ಹೇಳಿದರು.


Spread the love

LEAVE A REPLY

Please enter your comment!
Please enter your name here