ವಿಜಯಸಾಕ್ಷಿ ಸುದ್ದಿ, ಗದಗ : ಜನಸಾಮಾನ್ಯರ ದೈನಂದಿನ ಸಂಚಾರಕ್ಕೆ ಯಾವುದೇ ತರಹದ ಅಡೆತಡೆಯಾಗದಂತೆ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಸಾಧ್ಯವಾದಷ್ಟು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೂಚಿಸಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಿಗದಿಪಡಿಸಿದ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ ನಿರ್ಮಾಣ, ಬ್ರಿಡ್ಜ್ ನಿರ್ಮಾಣ, ಚರಂಡಿ ನಿರ್ಮಾಣ, ಬೀದಿದೀಪ ಕಾಮಗಾರಿಗಳನ್ನು ಇಲಾಖೆ ನಿರ್ದಿಷ್ಟಪಡಿಸಿದ ಅವಧಿಯೊಳಗೆ ಗುತ್ತಿಗೆದಾರರು ಪೂರ್ಣಗೊಳಿಸಬೇಕು. ಈ ಬಗ್ಗೆ ಅನುಷ್ಟಾನ ಇಲಾಖೆಗಳು ನಿರಂತರ ನಿಗಾ ವಹಿಸುವ ಮೂಲಕ ಕಾಮಗಾರಿ ಪೂರ್ಣಗೊಳಿಸುವಲ್ಲಿ ಗಮನ ಹರಿಸಬೇಕು ಎಂದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸಭೆಯ ಅಧ್ಯಕ್ಷತೆ ವಹಿಸಿ ಸಂಚಾರಿ ನಿಯಮಗಳ ಪಾಲನೆ ಮಾಡಲು ಸಾರ್ವಜನಿಕರಿಗೆ ನಿಗದಿತ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ನೀಡಬೇಕು. ರಸ್ತೆ ತಿರುವುಗಳಲ್ಲಿ, ಶಾಲಾ ಕಾಲೇಜುಗಳ ಹತ್ತಿರದ ರಸ್ತೆಗಳಲ್ಲಿ ವಾಹನಗಳು ನಿಧಾನಗತಿಯಿಂದ ಚಲಿಸುವಂತೆ ಮಾಡಲು ರಸ್ತೆ ತಡೆಗಳನ್ನು ಮಾರ್ಗಸೂಚಿಯನ್ವಯ ಮಾಡಬೇಕು. ಅವೈಜ್ಞಾನಿಕ ರಸ್ತೆ ತಡೆಗಳ ನಿರ್ಮಾಣ ಬೇಡ ಎಂದರು.
ರಾಷ್ಟ್ರೀಯ ಹೆದ್ದಾರಿ ಕಳಸಾಪುರ ಕ್ರಾಸ್ನಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಆ ಪ್ರದೇಶದಲ್ಲಿ ಸೂಕ್ತ ವ್ಯವಸ್ಥೆ ಮಾಡುವ ಮೂಲಕ ಅಪಘಾತಗಳನ್ನು ತಡೆಯಲು ಮುಂದಾಗಬೇಕು. ಈ ಕ್ರಮ ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಿಲ್ಲೆಯ ಸೊರಟೂರು ಹತ್ತಿರ ನಿರ್ಮಾಣವಾಗುತ್ತಿರುವ ಬ್ರಿಡ್ಜ್ ಕಾಮಗಾರಿಯನ್ನು ಒಂದು ತಿಂಗಳೊಳಗಾಗಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಅಲ್ಲದೇ ಕೇಶಿಪ್ ಸಂಸ್ಥೆಯಿಂದ ಕೈಗೊಂಡಿರುವ ಗದಗ-ಹೊನ್ನಾಳಿ ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಮಂಜುನಾಥ ಶಿರಾಳೆ, ನಗರಸಭೆ ಪೌರಾಯುಕ್ತ ಪ್ರಶಾಂತ ವರಗಪ್ಪನವರ, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಸಂಚಾರ ವ್ಯವಸ್ಥೆಗೆ ಅಭಿವೃದ್ಧಿ ಕಾಮಗಾರಿಗಳು ಅಡೆತಡೆಯಾಗಬಾರದು. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ವಿನಾಕಾರಣ ವಿಳಂಬ ಧೋರಣೆ ಅನುಸರಿಸಬಾರದು. ಕಾಮಗಾರಿ ಸ್ಥಳದಲ್ಲಿ ಸಾರ್ವಜನಿಕರ ಓಡಾಟಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವ ಮೂಲಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಇದಾವುದನ್ನೂ ಮಾಡದೇ ಕಾಮಗಾರಿ ಕೈಗೊಂಡರೆ ಅಪಘಾತವಾದಲ್ಲಿ ಅಥವಾ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನು ಎಸ್ಪಿ ಬಿ.ಎಸ್. ನೇಮಗೌಡ ನೀಡಿದರು.