ಬೆಂಗಳೂರು: ಒಂದೆಡೆ ಮಾರುಕಟ್ಟೆಯ ಸಮಸ್ಯೆಗಳನ್ನು ಪರಿಶೀಲಿಸಲು ಅಧಿಕಾರಿಗಳ ಜೊತೆ ಸಭೆ ನಡೆಸೋದು ಸಾಮಾನ್ಯ.
ಆದ್ರೆ ಇಂದು ಮುಂಜಾನೆ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೂಲಿ ಕಾರ್ಮಿಕರ ಜೊತೆ ಕುಳಿತು ಇಡ್ಲಿ ತಿಂದು ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ಕೂಲಿಕಾರರ ಉಪಹಾರದ ಬಿಲ್ ಅನ್ನೂ ತಾವೇ ಪಾವತಿಸಿ ಮಾನವೀಯತೆ ಮೆರೆದಿದ್ದಾರೆ.
ಎಸ್, ಮಂಗಳವಾರ ಮುಂಜಾನೆ 7 ಗಂಟೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಡಿ.ಕೆ. ಶಿವಕುಮಾರ್, ಈರುಳ್ಳಿ ಮಂಡಿಗೆ ತೆರಳಿ ಸ್ಥಳೀಯ ವರ್ತಕರು, ರೈತರು ಹಾಗೂ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು. ಮಾರುಕಟ್ಟೆಯ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದ ವೇಳೆ ರಸ್ತೆ ಬದಿಯ ಸಣ್ಣ ಪೆಟ್ಟಿಗೆ ಹೋಟೆಲ್ಗೆ ತೆರಳಿದ ಅವರು, ಅಲ್ಲಿದ್ದ ಕೂಲಿ ಕಾರ್ಮಿಕರ ಜೊತೆ ಕುಳಿತು ಇಡ್ಲಿ ಸೇವಿಸಿದರು.
ಈ ವೇಳೆ ತಮ್ಮ ಜೊತೆ ಕುಳಿತಿದ್ದ ಕೂಲಿ ಕಾರ್ಮಿಕರ ಉಪಹಾರದ ಹಣವನ್ನು ತಾವೇ ಪಾವತಿಸಲು ಮುಂದಾದ ಡಿ.ಕೆ. ಶಿವಕುಮಾರ್, ಹೋಟೆಲ್ ಮಾಲೀಕರಿಗೆ ₹500 ನೀಡಿ ಇವರ ಬಳಿ ಯಾವುದೇ ಹಣ ಪಡೆಯಬೇಡಿ ಎಂದು ಹೇಳಿದ್ದಾರೆ. ಸಿಎಂ ಸಾಮಾನ್ಯರ ಜೊತೆ ಕುಳಿತು ಉಪಹಾರ ಸೇವಿಸಿದ ದೃಶ್ಯ ಇದೀಗ ಗಮನ ಸೆಳೆದಿದೆ.
ಇನ್ನು ಮಾರುಕಟ್ಟೆ ಪರಿಶೀಲನೆ ವೇಳೆ ಎಪಿಎಂಸಿ ಮಾಜಿ ಸದಸ್ಯ ಅರುಣ್ ಪರಮೇಶ್ವರ್ ಸೇರಿದಂತೆ ಸ್ಥಳೀಯರು ಮಾರುಕಟ್ಟೆಯ ಅವ್ಯವಸ್ಥೆಗಳ ಬಗ್ಗೆ ಸಿಎಂ ಗಮನಕ್ಕೆ ತಂದರು. ರೈತರಿಗೆ ಕುಡಿಯುವ ನೀರಿನ ಸೌಲಭ್ಯ ಸಮರ್ಪಕವಾಗಿಲ್ಲ. ಒಂದು ಬಾಟಲಿ ನೀರಿಗೆ ₹20 ನೀಡಿ ಖರೀದಿಸಬೇಕಾದ ಪರಿಸ್ಥಿತಿ ಇದೆ ಎಂದು ದೂರಿದ್ದಾರೆ. ಶೌಚಾಲಯದ ವ್ಯವಸ್ಥೆಯೂ ಸರಿಯಾಗಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.
ಇದರ ಜೊತೆಗೆ ಹಿಂದಿನ ಅಧಿಕಾರಿಗಳ ಅವಧಿಯಲ್ಲಿ ರೈತರಿಗಾಗಿ ನಿರ್ಮಿಸಲಾದ ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ದಾಖಲೆಗಳನ್ನು ಒದಗಿಸುವುದಾಗಿ ಸ್ಥಳೀಯರು ಸಿಎಂಗೆ ತಿಳಿಸಿದ್ದಾರೆ.
ಮಂಡಿ ವ್ಯಾಪಾರಿಗಳು ಹಾಗೂ ರೈತರ ಜೊತೆಗಿನ ಮಾತುಕತೆಯಲ್ಲಿ ಮಧ್ಯವರ್ತಿಗಳ ಹಾವಳಿ, ಅಧಿಕಾರಿಗಳ ನಿಯಂತ್ರಣದ ಕೊರತೆ ಹಾಗೂ ತೂಕದಲ್ಲಿ ಮೋಸ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಚಿತ್ರದುರ್ಗ ಸೇರಿದಂತೆ ಹೊರ ಜಿಲ್ಲೆಗಳಿಂದ ರೈತರು ಯಶವಂತಪುರ ಮಾರುಕಟ್ಟೆಗೆ ಬರುತ್ತಿದ್ದು, ಇಲ್ಲಿ ಮಧ್ಯವರ್ತಿಗಳ ಸಮಸ್ಯೆ ಹೆಚ್ಚಾಗಿದೆ ಎಂದು ರೈತರು ತಿಳಿಸಿದ್ದಾರೆ.
ಅಷ್ಟೇ ಅಲ್ಲ, 65 ಕೆಜಿ ತೂಕದ ಮೂಟೆಯನ್ನು ಕೇವಲ 50 ಕೆಜಿ ಎಂದು ಲೆಕ್ಕ ಹಾಕಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ರೈತರು ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದಿದ್ದಾರೆ.
ಒಟ್ಟಾರೆ, ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಡಿ.ಕೆ. ಶಿವಕುಮಾರ್, ರೈತರ ಹಾಗೂ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ, ಅವರ ಜೊತೆ ಕುಳಿತು ಇಡ್ಲಿ ಸೇವಿಸಿ ₹500 ನೀಡಿ ಉಪಹಾರದ ಬಿಲ್ ಪಾವತಿಸಿರುವುದು ಗಮನ ಸೆಳೆದಿದೆ.



