ರಾಯಚೂರು: ಕಲಿಯುಗ ಕಾಮಧೇನು ಎಂದೇ ಪ್ರಸಿದ್ಧವಾಗಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಗಸ್ಟ್–ಸೆಪ್ಟೆಂಬರ್ ತಿಂಗಳ 16 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿದೆ.
16 ದಿನಗಳಲ್ಲಿ ಒಟ್ಟು ₹3,30,69,139 ಕಾಣಿಕೆ ಸಂಗ್ರಹವಾಗಿದೆ. ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಕಾಣಿಕೆ ಪ್ರಮಾಣದಲ್ಲೂ ಏರಿಕೆಯಾಗಿದೆ.
ಒಟ್ಟು ಸಂಗ್ರಹದಲ್ಲಿ ₹3,20,66,639 ಮೌಲ್ಯದ ಕರೆನ್ಸಿ ನೋಟುಗಳು ಹಾಗೂ ₹10,02,500 ಮೌಲ್ಯದ ನಾಣ್ಯಗಳು ಸೇರಿವೆ. ಇದರ ಜೊತೆಗೆ ಭಕ್ತರು 47 ಗ್ರಾಂ ಚಿನ್ನ ಹಾಗೂ 632 ಗ್ರಾಂ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ.
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ ಸದಸ್ಯರು ಹಾಗೂ ಕರಸೇವಕರು ಭಾಗವಹಿಸಿದ್ದರು.
ಹುಂಡಿ ಎಣಿಕೆ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಶ್ರೀಮಠದ ಅಧಿಕಾರಿಗಳು ಉಪಸ್ಥಿತರಿದ್ದರು.



