ನವದೆಹಲಿ: ವಿದ್ಯಾರ್ಥಿಗಳು ತಂತ್ರಜ್ಞಾನ ತಮ್ಮನ್ನು ಗುಲಾಮರನ್ನಾಗಿಸಲು ಬಿಡಬಾರದು. ಬದಲಿಗೆ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ತಂತ್ರಜ್ಞಾನವನ್ನು ಉಪಯೋಗಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.
‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದ ಎರಡನೇ ಸಂಚಿಕೆಯಲ್ಲಿ ಇಂದು ಕೊಯಮತ್ತೂರು, ರಾಯ್ಪುರ, ಗುವಾಹಟಿ ಹಾಗೂ ಗುಜರಾತ್ನ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ವೇಳೆ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, ತಂತ್ರಜ್ಞಾನ ಬಳಕೆಯ ಕುರಿತು ಮಹತ್ವದ ಸಲಹೆಗಳನ್ನು ನೀಡಿದರು.
ಇಂದಿನ ದಿನಗಳಲ್ಲಿ ಕೆಲವು ಮಕ್ಕಳನ್ನು ಮೊಬೈಲ್ ಫೋನ್ಗಳು ಆಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ ಪ್ರಧಾನಿ, “ಕೆಲವು ಮಕ್ಕಳು ಊಟ ಮಾಡುವಾಗಲೂ ಮೊಬೈಲ್ ಅಥವಾ ಟಿವಿ ಬೇಕು ಎನ್ನುತ್ತಾರೆ. ಇದರರ್ಥ ಅವರು ತಂತ್ರಜ್ಞಾನಕ್ಕೆ ಗುಲಾಮರಾಗುತ್ತಿದ್ದಾರೆ. ತಂತ್ರಜ್ಞಾನ ನಿಮ್ಮನ್ನು ನಿಯಂತ್ರಿಸದಂತೆ ನೋಡಿಕೊಳ್ಳುವ ದೃಢ ಸಂಕಲ್ಪವನ್ನು ಮಾಡಬೇಕು” ಎಂದು ಹೇಳಿದರು.
ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳ ಬಗ್ಗೆ ಭಯಪಡುವ ಅಗತ್ಯವಿಲ್ಲ. ಅವುಗಳನ್ನು ಸರಿಯಾಗಿ ಬಳಸಿಕೊಂಡರೆ ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ಮೋದಿ ತಿಳಿಸಿದರು.
ಪರೀಕ್ಷಾ ಸಿದ್ಧತೆಯ ಕುರಿತು ಮಾತನಾಡಿದ ಪ್ರಧಾನಿ, ಹಿಂದಿನ ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಮಾಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. “ಚೆನ್ನಾಗಿ ತಯಾರಿ ಮಾಡಿಕೊಂಡಿದ್ದರೆ ಪರೀಕ್ಷೆಯ ಬಗ್ಗೆ ಭಯ ಅಥವಾ ಚಿಂತೆ ಇರುವುದಿಲ್ಲ” ಎಂದು ಹೇಳಿದರು.
ಅಲ್ಲದೆ, ಪರೀಕ್ಷೆಯ ಸಮಯದಲ್ಲಿ ನಿದ್ದೆಗೆಟ್ಟು ಓದುವುದಕ್ಕಿಂತ ಉತ್ತಮ ನಿದ್ರೆ ಮಾಡುವುದು ಬಹಳ ಮುಖ್ಯ. “ರಾತ್ರಿ ಚೆನ್ನಾಗಿ ನಿದ್ರೆ ಮಾಡಿದರೆ ಮುಂದಿನ ದಿನ ಉಲ್ಲಾಸವಾಗಿರಲು ಸಾಧ್ಯ” ಎಂದು ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದರು.



