ವಿಜಯಸಾಕ್ಷಿ ಸುದ್ದಿ, ಮುಳಗುಂದ: ಗದಗ ಜಿಲ್ಲೆಯಾದ್ಯಂತ ಬೆಂಬಲ ಬೆಲೆಯಡಿ ಗೋವಿನಜೋಳ ಖರೀದಿ ಕೇಂದ್ರ ಪ್ರಾರಂಭಿಸುವಂತೆ ಆಗ್ರಹಿಸಿ ಸ್ಥಳೀಯ ರೈತ ಸಂಘದಿಂದ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಗದಗ-ಲಕ್ಷ್ಮೇಶ್ವರ ಸಂಪರ್ಕ ಕಲ್ಪಿಸುವ ಪಾಲಾ-ಬಾದಾಮಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಮೇಲೆ ಕೇಂದ್ರ ಸರ್ಕಾರ, ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಬೊಟ್ಟುವಿಷಯ ಮಾಡಿ ತೋರಿಸುವುದು, ರಾಜಕೀಯ ಮಾಡುವುದನ್ನು ಬಿಡಬೇಕು. ಗ್ಯಾರಂಟಿ ಯೋಜನೆಗಳನ್ನು ನೀಡಿ, ಅದನ್ನು ಭರಿಸಲು ರೈತರಿಂದ, ಸಾಮಾನ್ಯ ಜನರಿಂದ ಸುಲಿಗೆ ಮಾಡುತ್ತಿದ್ದಾರೆ. ರೈತರನ್ನು ದೇಶದ ಬೆನ್ನೆಲುಬು ಎಂದು ಹೇಳಿಕೊಂಡು ರೈತರ ಬೆನ್ನೆಲುಬನ್ನು ಮುರಿಯುವ ಕೆಲಸವನ್ನು ಮಾಡುತ್ತಿದ್ದಾರೆ. ರೈತರು ಬೆಳೆಯುವುದನ್ನು ಬಿಟ್ಟರೆ ನೀವೆಲ್ಲ ಮಣ್ಣು ತಿನ್ನಬೇಕಾಗುತ್ತದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಕಾಲಹರಣ ಮಾಡದೇ ಇನ್ನು 7 ದಿನಗಳೊಳಗಾಗಿ ಗೋವಿನಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಪ್ರಾರಂಭಿಸದಿದ್ದರೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಸಿದರು.
ಸ್ಥಳಕ್ಕೆ ಉಪವಿಭಾಗಾಧಿಕಾರಿ ಗಂಗಪ್ಪ ಎಂ ಆಗಮಿಸಿ, ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮುಂದಿನ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ತಿಳಿಸುತ್ತೇನೆ, ಪ್ರತಿಭಟನೆ ಹಿಂಪಡೆಯಿರಿ ಎಂದಾಗ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ನಮ್ಮ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.
ನಂತರ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಮನವಿ ಸ್ವೀಕರಿಸಿ, ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಆದಷ್ಟು ಬೇಗ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಈ ವೇಳೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು. ಗದಗ ಡಿವೈಎಸ್ಪಿ ಮುರ್ತುಜಾ ಖಾದ್ರಿ, ಗದಗ ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಇ.ಓ. ಮಲ್ಲಯ್ಯ ಕೊರಣ್ಣವರ ಇತರರು ಇದ್ದರು.
ರೈತರು ಬೆಳೆದ ಪ್ರತಿ ಬೆಳೆಗೂ ಸರಿಯಾದ ಬೆಲೆ ಇಲ್ಲ. ರೈತರು ಪ್ರತಿಯೊಂದನ್ನು ಪಡೆಯಬೇಕಾದರೂ ಹೋರಾಟ ಮಾಡಬೇಕಾಗಿರುವುದು ಅನಿವಾರ್ಯವಾಗಿದೆ. ಮಾರುಕಟ್ಟೆಯಲ್ಲಿ ಗೋವಿನಜೋಳವನ್ನು 1500-1600 ರೂ/ಕ್ವಿಂ ಖರೀದಿಸುತ್ತಿದ್ದಾರೆ. ಇದು ರೈತರಿಗೆ ತುಂಬಲಾರದ ನಷ್ಟವಾಗಿದೆ. ರಾಜ್ಯ ಸರ್ಕಾರ ಎಂಎಸ್ಪಿ ಮಾರ್ಗಸೂಚಿ ಅನ್ವಯ ಕನಿಷ್ಠ 2400 ಹಾಗೂ ರಾಜ್ಯ ಸರ್ಕಾರ 600 ರೂ. ಗಳೊಂದಿಗೆ 1 ಕ್ವಿಂ.ಗೆ 3 ಸಾವಿರ ರೂ.ಂತೆ ಖರೀದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.



