ವಿಜಯಸಾಕ್ಷಿ ಸುದ್ದಿ, ನರಗುಂದ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಲ್ಲಿ ಭಾಗವಹಿಸಿ, ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬನಹಟ್ಟಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಗಣಿ ಕರೆ ನೀಡಿದರು.
ಬನಹಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬನಹಟ್ಟಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಸಮುದಾಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬೇಸಿಗೆ ಅವಧಿಯಲ್ಲಿ ರೈತರ ಹೊಲಗಳಲ್ಲಿ ಬದು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಎಸ್ಸಿ–ಎಸ್ಟಿ ಸಮುದಾಯದ ರೈತರು ಮತ್ತು ಕಾರ್ಮಿಕರು ತಮ್ಮ ಹೊಲಗಳಿಗೂ ಬದು ನಿರ್ಮಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ಮಳೆ ಇಲ್ಲದೆ ಕೂಲಿ ಕೆಲಸ ಸಿಗುತ್ತಿಲ್ಲ ಎಂದು ಆತಂಕಪಡುವ ಅಗತ್ಯವಿಲ್ಲ. ಮಳೆ ಆರಂಭವಾಗುವವರೆಗೂ ನರೇಗಾ ಯೋಜನೆಯಡಿ ಕೆಲಸ ನೀಡಲು ಗ್ರಾಮ ಪಂಚಾಯತ್ ಸಿದ್ಧವಿದ್ದು, ಬನಹಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲ ಗ್ರಾಮಗಳ ಕಾರ್ಮಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.
ನರೇಗಾ ಜಾಬ್ ಕಾರ್ಡ್ನ್ನು ಗ್ರಾಮ ಪಂಚಾಯತ್ ವತಿಯಿಂದ ಉಚಿತವಾಗಿ ನೀಡಲಾಗುತ್ತದೆ. ಕೆಲಸಕ್ಕೆ ಹಾಜರಾಗಲು ಉದ್ಯೋಗ ಚೀಟಿಯೊಂದಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಿಸಿರಬೇಕು ಎಂದು ತಿಳಿಸಿದರು.
ನರೇಗಾ ಯೋಜನೆಯಡಿ ಗಂಡು–ಹೆಣ್ಣು ಭೇದವಿಲ್ಲದೆ ದಿನಕ್ಕೆ ₹370 ಸಮಾನ ಕೂಲಿ ನೀಡಲಾಗುತ್ತಿದೆ. ಬೇಸಿಗೆ ಕಾರಣ ವಲಸೆ ಹೋಗದೇ, ತಮ್ಮ ಊರಲ್ಲೇ ಕೆಲಸ ಪಡೆದು ಆರೋಗ್ಯಕರ ಜೀವನ ನಡೆಸುವಂತೆ ಸಲಹೆ ನೀಡಿದರು.
ಪಿಡಿಓ ಮಂಜುನಾಥ ಗಣಿ ನೇತೃತ್ವದಲ್ಲಿ ನರೇಗಾ ಐಇಸಿ ಚಟುವಟಿಕೆಗಳ ಮೂಲಕ ಬನಹಟ್ಟಿ ಗ್ರಾಮದ ಎಸ್ಸಿ–ಎಸ್ಟಿ ಕಾಲೋನಿಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ಕೈಗೊಳ್ಳಲಾಗಿತ್ತು. ಇದರ ಪರಿಣಾಮವಾಗಿ 60ಕ್ಕೂ ಹೆಚ್ಚು ಎಸ್ಸಿ–ಎಸ್ಟಿ ಸಮುದಾಯದ ಕಾರ್ಮಿಕರು ಶುಕ್ರವಾರ ನರೇಗಾ ಕೆಲಸಕ್ಕೆ ಹಾಜರಾಗಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮಾಳಪ್ಪ ಪೂಜಾರ, ಸಿಬ್ಬಂದಿ ಶಿವನಪ್ಪ ಕಲ್ಲಾಪೂರ, ನರೇಗಾ ಸಿಬ್ಬಂದಿಗಳಾದ ಸುನೀಲ ಶಿರೋಳ, ಮಂಜುನಾಥ ನಾಡಗೌಡ ಹಾಗೂ ಕಾಯಕಬಂಧು ತಳವಾರ ಉಪಸ್ಥಿತರಿದ್ದರು.
“ಮಳೆ ಇಲ್ಲದೆ ಕೆಲಸ ಸಿಗುತ್ತಿಲ್ಲ ಎಂದು ಚಿಂತಿಸಬೇಡಿ. ಮಳೆ ಆರಂಭವಾಗುವವರೆಗೂ ನರೇಗಾ ಯೋಜನೆಯಡಿ ಕೆಲಸ ನೀಡಲು ಗ್ರಾಮ ಪಂಚಾಯತ್ ಸಿದ್ಧವಿದೆ.”
ಮಂಜುನಾಥ ಗಣಿ
ಪಿಡಿಓ, ಬನಹಟ್ಟಿ ಗ್ರಾಮ ಪಂಚಾಯತ್



