ವಿಜಯಸಾಕ್ಷಿ ಸುದ್ದಿ, ರೋಣ : ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟçಗಳಲ್ಲಿ ನಮ್ಮ ಭಾರತ ದೇಶ ಅಗ್ರ ಸ್ಥಾನ ಪಡೆದಿದೆ. ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಯಾಗಿಸಲು ನಿಮ್ಮೆಲ್ಲರ ಸಹಕಾರ ಅಗತ್ಯ. ತಾವೆಲ್ಲರೂ ತಪ್ಪದೇ ಕಡ್ಡಾಯವಾಗಿ ಮಾತದಾನ ಮಾಡಿ, ಹಾಗೂ ಮಾಡಿಸಿ ಎಂದು ರೋಣ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಕೆ. ಇನಾಮದಾರ ಹೇಳಿದರು.
ರೋಣ ತಾಲೂಕಿನ ಮಲ್ಲಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದಿಗವಾಡ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆದ ಸಮುದಾಯ ಕಾಮಗಾರಿಯ ಬದು ನಿರ್ಮಾಣ ಹೂಳೆತ್ತುವ ಕಾಮಗಾರಿ ಸಂದರ್ಭದಲ್ಲಿ ಭೇಟಿ ನೀಡಿ ಮಾತನಾಡಿದ ಅವರು, ಮೇ 7ರಂದು ನಮ್ಮ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ನಿಮ್ಮ ಮತವನ್ನು ಮಾರಿಕೊಳ್ಳಬೇಡಿ, ನಿಮ್ಮ ಮಕ್ಕಳ ಜೀವನವನ್ನು ದೃಷ್ಟಿಯಲ್ಲಿಟ್ಟುಕೊಂಡು ಮತದಾನ ಮಾಡಿ ಎಂದರು.
ಭಾರತದಲ್ಲಿ ಚುನಾವಣಾ ಆಯೋಗವು ಯಾರ ಹಂಗಿಲ್ಲದೇ, ಯಾರ ಆಡಳಿತಕ್ಕೆ ಒಳಪಡದೇ ಕೆಲಸ ಮಾಡುತ್ತದೆ. ಚುನಾವಣೆಯಲ್ಲಿ ಯಾರ ಹಸ್ತಕ್ಷೇಪವೂ ಇರಬಾರದು. ಅಂದಾಗ ಮಾತ್ರ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಾಗುತ್ತದೆ, ಜನಪರ ಸರ್ಕಾರ ಆಡಳಿತಕ್ಕೆ ಬರಲು ಸಾಧ್ಯ. ಈ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ದಿವ್ಯಾಂಗ ವ್ಯಕ್ತಿಗಳಿಗೆ ಮನೆಯಲ್ಲಿಯೇ ಮತದಾನ ಮಾಡಲು ಚುನಾವಣಾ ಆಯೋಗವು ಅವಕಾಶ ಮಾಡಿಕೊಟ್ಟಿದೆ ಎಂದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ(ಗ್ರಾ.ಉ) ರಿಯಾಜ್ ಖತೀಬ್, ಮಲ್ಲಾಪೂರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಶೀದ ಹುಣಸಿಮರದ, ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ, ಐಇಸಿ ಸಂಯೋಜಕ ಮಂಜುನಾಥ, ಬಿಎಫ್ಟಿ ಈರಣ್ಣ ಬೇಲೆರಿ ಸೇರಿದಂತೆ ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.
ಉತ್ತರ ಕರ್ನಾಟಕ ಭಾಗದಲ್ಲಿ ಸಣ್ಣ ಹಿಡುವಳಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರು ಬಹುತೇಕ ಮಳೆ ಆಶ್ರಿತ ಕೃಷಿಯನ್ನು ಅವಲಂಬಿಸಿದ್ದಾರೆ. ಸಕಾಲಕ್ಕೆ ಮಳೆ ಆಗದ ಹಿನ್ನೆಲೆಯಲ್ಲಿ ಕೆಲಸ ಇಲ್ಲದೇ ಗೋವಾ, ಮಂಗಳೂರು, ಬೆಂಗಳೂರು ಸೇರಿದಂತೆ ಅನೇಕ ನಗರಗಳಿಗೆ ದುಡಿಯಲು ಗುಳೆ ಹೋಗುತ್ತಿದ್ದರು. ಅದರೆ ಇತ್ತೀಚಿನ ದಿನಗಳಲ್ಲಿ ಅಲ್ಲಿ ಕೊಡುವ ಕೂಲಿಯನ್ನು ನರೇಗಾ ಯೋಜನೆಯು ಕೊಡುವದರಿಂದ ಇಲ್ಲೇ ನೀವು ದುಡಿಯಲು ಬರುತ್ತಿದ್ದೀರಿ ಎಂದು ಎಸ್.ಕೆ. ಇನಾಮದಾರ ಹೇಳಿದರು.