ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ನಡೆಸಿದ್ದರು. ಇದರಿಂದ ತಾಳ್ಮೆ ಕಳೆದುಕೊಂಡ ಸಿಎಂ ಸಿದ್ದರಾಮಯ್ಯ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯ ಮೇಲೆ ಕೈ ಮಾಡಲು ಮುಂದಾಗಿದ್ದು ಅವರ ಘನತೆಗೆ ತಕ್ಕುದಲ್ಲ. ಅವರಿಗೆ ಅಧಿಕಾರದ ಮದವೇರಿದೆ ಎಂದು ಬಿಜೆಪಿ ಯುವ ಮುಖಂಡ ವಸಂತ ಪಡಗದ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಹಿಂದ ನಾಯಕ, ರಾಜ್ಯ ಕಂಡ ಅತ್ಯಪರೂಪದ ಮುಖ್ಯಮಂತ್ರಿಗೆ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಯ ಮೇಲೆ ಬಹಿರಂಗ ಸಮಾವೇಶದಲ್ಲಿ ಹೊಡೆಯಲು ಕೈ ಎತ್ತಿದ್ದು ಖಂಡನೀಯ. ಕೇವಲ 5 ವರ್ಷ ಅಧಿಕಾರದಲ್ಲಿದ್ದುಕೊಂಡು 40 ವರ್ಷಗಳ ಕಾಲ ಕೆಲಸ ಮಾಡುವ ಸರ್ಕಾರಿ ನೌಕರರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಇಂತಹ ಘಟನೆಗಳ ಮೂಲಕ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಆತ್ಮಸ್ಥೈರ್ಯ ಕುಗ್ಗಿಸಲು ಹೊರಟಿದ್ದಾರೆ. ಕೂಡಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಯ ಬಳಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.