ವಿಜಯಸಾಕ್ಷಿ ಸುದ್ದಿ, ಗದಗ : ಡಿವಿಪಿ ರಾಜ್ಯ ಘಟಕವು ವಿದ್ಯಾರ್ಥಿಗಳು, ಯುವ ಜನರಿಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಾಧಾರಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಹಮ್ಮಿಕೊಂಡಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ವಾಯ್.ಚಲವಾದಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕ ಪ್ರಸಕ್ತ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಚಾಲನೆ ನೀಡಿದೆ. ಅದರ ಭಾಗವಾಗಿ ಜಿಲ್ಲೆಯ ವಿದ್ಯಾರ್ಥಿ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ www.mydvp.org ಅಂತರ್ಜಾಲದಲ್ಲಿ ನೋಂದಣಿ ಮಾಡಿಸಿ ಡಾ.ಅಂಬೇಡ್ಕರರ ವಿಚಾರಧಾರೆಗಳನ್ನು ಅರ್ಥೈಸಿಕೊಳ್ಳಬೇಕು. ಸಮ ಸಮಾಜದ ಪರಿಕಲ್ಪನೆಯೊಂದಿಗೆ ಉತ್ತಮವಾದ ಸಮಾಜವನ್ನು ಕಟ್ಟಬೇಕೆಂಬ ಮಹದಾಸೆಯಿಂದ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಈ ಪರೀಕ್ಷೆಯನ್ನು ಹಮ್ಮಿಕೊಂಡಿದೆ.
ಈ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ 3 ಲಕ್ಷ ರೂ, ದ್ವಿತೀಯ ಸ್ಥಾನ ಪಡೆದ ಅಭ್ಯರ್ಥಿಗಳಿಗೆ 2 ಲಕ್ಷ ರೂ ಹಾಗೂ ತ್ರತೀಯ ಶ್ರೇಣಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ 1 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ವಿದ್ಯಾರ್ಥಿ ಯುವ ಸಮುದಾಯ ತಮ್ಮ ಅತ್ಯಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೇ ಜ್ಞಾನದ ಸಂಕೇತವಾದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಹೆಚ್ಚು ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ವಿಜಯಶಾಲಿಯಾಗಬೇಕೆಂದು ಹೇಳಿದ್ದಾರೆ.