ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪೋಷಕರು ಆಂಗ್ಲ ಮಾಧ್ಯಮದ ವ್ಯಾಮೋಹ ಬಿಟ್ಟು ಮಾತೃಭಾಷೆಯ ಮೇಲೆ ಅಭಿಮಾನವಿಟ್ಟು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಅವರು ತಾಲೂಕಿನ ಅಡರಕಟ್ಟಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಪ್ರತೀ ಮಗುವಿನ ಹಕ್ಕಾಗಿದ್ದು, ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಅನೇಕ ಸೌಲಭ್ಯಗಳನ್ನು ನೀಡುತ್ತದೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು, ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಗೌರವಯುತ ಜೀವನ ನಡೆಸುವಂತಾಗಬೇಕು. ಪಾಲಕರು ಕೇವಲ ಬಡತನವನ್ನೇ ನೆಪ ಮಾಡಿಕೊಂಡು ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವುದು ಅಕ್ಷಮ್ಯ ಅಪರಾಧ. ಆದ್ದರಿಂದ ಎಂತಹದ್ದೇ ಕಷ್ಟ-ನಷ್ಟಗಳಿರಲಿ ವಿದ್ಯೆಯೇ ಸಂಪತ್ತಾಗಿದ್ದು, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು. ಇದು ಕೇವಲ ಸರಕಾರದ ಜವಾಬ್ದಾರಿ ಅಷ್ಟೇ ಆಗದೇ ಪಾಲಕರು, ಸಂಘ-ಸAಸ್ಥೆಗಳು, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಶಾಲೆ ಬಿಟ್ಟ ಮತ್ತು ಹೊರಗುಳಿದ ಮಕ್ಕಳ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳು ಶಾಲೆ ತಪ್ಪಿಸದೇ ಶ್ರದ್ಧೆಯಿಂದ ಓದುವ ಮೂಲಕ ಉತ್ತಮ ನಾಗರಿಕರಾಗಿ ಹೊರಹೊಮ್ಮಬೇಕೆಂದು ಹೇಳಿದರು.
ಶಾಸಕ ಡಾ.ಚಂದ್ರು ಲಮಾಣಿ ಮಕ್ಕಳಿಗೆ ಸಮವಸ್ತç, ಪಠ್ಯಪುಸ್ತಕ ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳು ದೊರೆಯುತ್ತವೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದರು.
ತಹಸೀಲ್ದಾರ ವಾಸುದೇವ ಸ್ವಾಮಿ, ತಾ.ಪಂ ಇಓ ಕೃಷ್ಣಪ್ಪ ಧರ್ಮರ, ಗ್ರಾ.ಪಂ ಅಧ್ಯಕ್ಷೆ ಪ್ರೇಮಕ್ಕ ಮಾನಪ್ಪ ಲಮಾಣಿ, ಉಪನಿರ್ದೇಶಕ ಆರ್.ಎಸ್. ಬುರಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಣಕಿ ನಾಯಕ್ ಭಾಗವಹಿಸಿ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕಗಳನ್ನು ವಿತರಿಸಿದರು. ಎಸ್ಡಿಎಂಸಿ ಅಧ್ಯಕ್ಷೆ ಜಯಶ್ರೀ ವಿರೇಶ ಭಂಗಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಲಾಪುರ, ಕಾರ್ಯದರ್ಶಿ ಚಂದ್ರಕಾಂತ ನೇಕಾರ, ನಿ.ದೈಹಿಕ ಶಿಕ್ಷಣಾಧಿಕಾರಿ ಎಂ.ಎಂ. ಹವಳದ, ಬಿಆರ್ಪಿ ಈಶ್ವರ ಮೆಡ್ಲೇರಿ, ಇಸಿಓ ಉಮೇಶ ಹುಚ್ಚಯ್ಯನಮಠ, ಗೀತಾ ಹಳ್ಯಾಳ ಮತ್ತು ಶಿಕ್ಷಕರು ಇದ್ದರು. ಸಿಆರ್ಪಿ ಸತೀಶ ಬೋಮಲೆ, ಉಮೇಶ ನೇಕಾರ, ಶಿವಾನಂದ ನಿರ್ವಹಿಸಿದರು. ಡಿ.ಡಿ. ಲಮಾಣಿ, ಪಿ.ಸಿ. ಕಾಳಶೆಟ್ಟಿ, ಸಾವಿತ್ರಿ ಉಮಚಗಿ ನಿರೂಪಿಸಿದರು.
ಎರಡು ತಿಂಗಳ ರಜೆ ಬಳಿಕ ಶಾಲೆಗಳು ವಿಶೇಷ ರೀತಿಯಲ್ಲಿ ಪ್ರಾರಂಭಗೊಂಡು ಶಾಲೆಯಲ್ಲಿ ಮತ್ತೆ ಮಕ್ಕಳ ಕಲರವ ಕೇಳಿ ಬಂದಿತು. ವಿಶೇಷ ಪ್ರಾರಂಭೋತ್ಸವಕ್ಕಾಗಿ ಶಾಲೆಗೆ ಬಣ್ಣ ಹಚ್ಚಿ, ತಳಿರು-ತೋರಣ, ಬಲೂನ್ಗಳಿಂದ ಸಿಂಗರಿಸಲಾಗಿತ್ತು. ಮೊದಲ ದಿನ ಸರಸ್ವತಿ ಮತ್ತು ವಿನಾಯಕ ಪೂಜಾ ಕಾರ್ಯ ಕೈಗೊಳ್ಳಲಾಯಿತು. ಬಣ್ಣ ಬಣ್ಣದ ಹೊಸ ಉಡುಗೆಯುಟ್ಟು ಬಂದಿದ್ದ ಮಕ್ಕಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿ ಮತ್ತು ಶಿಕ್ಷಕರು ಹೂವು, ಸಿಹಿ, ಚಾಕಲೇಟ್ ನೀಡಿ ಸ್ವಾಗತಿಸಿದರು. ಮಕ್ಕಳಿಗೆ ಬಿಸಿಯೂಟದೊಂದಿಗೆ ಸಿಹಿಯನ್ನೂ ಬಡಿಸಲಾಯಿತು.



