ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮಾಜದ ವತಿಯಿಂದ ಭಾನುವಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಿ, ವಿವಿಧ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ನೇಮಿರಾಜ್ ನಾಯ್ಕ್, “ಮಕ್ಕಳು ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ರೂಢಿಸಿಕೊಳ್ಳಬೇಕು. ಪೋಷಕರು ತಮ್ಮ ಸುಖವನ್ನು ತ್ಯಾಗ ಮಾಡಿ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಾರೆ. ವಿದ್ಯಾವಂತರಾಗಿ ಉನ್ನತ ಹುದ್ದೆ ಸೇರಿದ ಬಳಿಕ ಹೆತ್ತ ತಂದೆ-ತಾಯಿಯನ್ನು ಮರೆಯದೆ ಅವರ ಸೇವೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಹಿರಿಯರಿಗೆ ಗೌರವ ನೀಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ಗದುಗಿನ ತೋಟದಾರ್ಯ ಶಾಖಾಮಠದ ಬಾಚಿಗೊಂಡನಹಳ್ಳಿಯ ಶ್ರೀ ಶಿವ ಮಹಾಂತ ಮಹಾಸ್ವಾಮಿಗಳು ಹಾಗೂ ಕಡಲಬಾಳಿನ ಶ್ರೀ ಗವಿಸಿದ್ದೇಶ್ವರ ಶಾಖಾಮಠದ ಶ್ರೀ ಮರಿ ಶಾಂತವೀರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಶಿಕ್ಷಣದ ಮೂಲಕ ಸಮಾಜದ ಪ್ರಗತಿ ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡ ಹೆಗ್ಡಾಳ್ ರಾಮಣ್ಣ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಇನ್ನಷ್ಟು ಸಾಧಿಸುವ ಉತ್ಸಾಹ ತುಂಬುತ್ತವೆ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನೂ ನೀಡಬೇಕು ಎಂದು ಹೇಳಿದರು.
ಸಮಾಜದ ಹಿರಿಯ ಬಲ್ಲಾಹುಣ್ಸೆ ರಾಮಣ್ಣ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಹೆಚ್ಚುತ್ತಿರುವುದು ಸಂತಸದ ಸಂಗತಿ. ಪೋಷಕರು ಕಾಣುವ ಕನಸನ್ನು ನನಸಾಗಿಸುವ ಹೊಣೆ ಮಕ್ಕಳ ಮೇಲಿದೆ ಎಂದು ತಿಳಿಸಿದರು.
ದಲಿತ ಸಂಘರ್ಷ ಸಮಿತಿಯ ಸಂಚಾಲಕ ದುರುಗೇಶ್ ಮಾತನಾಡಿ, ಹಲವು ದಶಕಗಳ ಹೋರಾಟದಿಂದ ದೊರೆತಿರುವ ಮೀಸಲಾತಿಯ ಸೌಲಭ್ಯವನ್ನು ಸಮಾಜದ ಮಕ್ಕಳು ಶಿಕ್ಷಣದ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಹೂವಿನಹಡಗಲಿಯ ದಲಿತ ಮುಖಂಡ ಉಚ್ಚಂಗೆಪ್ಪ ಮಾತನಾಡಿ, ಸಮಾಜದಲ್ಲಿ ಶಿಕ್ಷಣದ ಅರಿವು ಹೆಚ್ಚುತ್ತಿರುವುದು ಆಶಾದಾಯಕ ಬೆಳವಣಿಗೆ. ಯಾವುದೇ ಕಷ್ಟ ಬಂದರೂ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಪೋಷಕರಿಗೆ ಮನವಿ ಮಾಡಿದರು.
ಇದೇ ವೇಳೆ ಪೂಜಪ್ಪ, ಕಂದ್ಗಲ್ ಪರಶುರಾಮ, ಆರ್ಟಿಒ ಪರಮೇಶಪ್ಪ ಸೇರಿದಂತೆ ಹಲವರು ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹೆಗ್ಡಾಳ್ ಪರಶುರಾಮ, ಕಲ್ಲಳ್ಳಿ ನಾಗರಾಜ್, ಅಡವಿ ಆನಂದದೇವನಹಳ್ಳಿಯ ಪ್ರಭಾಕರ್, ಅಲಬೂರು ಮರಿಯಪ್ಪ, ಯಡ್ರಮ್ಮನಹಳ್ಳಿ ಮರಿಯಪ್ಪ, ದುರುಗಪ್ಪ ಕಿತ್ನೂರು, ಉಮೇಶ್ ಕೋಗಳಿ, ಒಂಟಿ ಮೇಘರಾಜ್ ಸೇರಿದಂತೆ ಸಮಾಜದ ಮುಖಂಡರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



