ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಹ್ಮದ್ ಪೈಗಂಬರ್ ಅವರ ಜಯಂತಿ (ಈದ್ ಮಿಲಾದ್) ಶಾಂತಿ ಮತ್ತು ಸಹನೆಯ ಪ್ರತೀಕವಾಗಿದ್ದು, ಈದ್ ಮಿಲಾದ್ ಸೇರಿದಂತೆ ಎಲ್ಲ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್ಪಿ ಮುರ್ತುಜಾ ಖಾದ್ರಿ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಹ್ಮದ್ ಪೈಗಂಬರ್ ಜಯಂತಿ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
ಈ ಭಾಗದ ಜನರು ಶಾಂತಿ, ಸೌಹಾರ್ದತೆಯಿಂದ ಬಾಳುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಸಣ್ಣಪುಟ್ಟ ವಿಚಾರಗಳಿಗೆ ಶಾಂತಿಯ ವಾತಾವರಣಕ್ಕೆ ಧಕ್ಕೆ ತರುವಂತಹ ಯಾವುದೇ ಘಟನೆಗಳು ನಡೆಯಬಾರದು. ಹಬ್ಬದ ಆಚರಣೆಗೆ ಪೊಲೀಸ್ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲಿದೆ. ಆದರೆ ಹಬ್ಬದ ನೆಪದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮುಸ್ಲಿಂ ಬಾಂಧವರು ಮಹ್ಮದ್ ಪೈಗಂಬರ್ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವುದಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ ಯಾರೇ ಕಾನೂನು ಕೈಗೆತ್ತಿಕೊಂಡು ಶಾಂತಿ ಕದಡುವ ಪ್ರಯತ್ನ ಮಾಡಿದರೂ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ಪಟ್ಟಣದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಹಿಂದೂ ಹಾಗೂ ಮುಸ್ಲಿಂ ಬಾಂಧವರು ಪೊಲೀಸರೊಂದಿಗೆ ಸಹಕರಿಸಿ ಶಾಂತಿ ಕಾಪಾಡುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಿಪಿಐ ಬಿ.ವಿ. ನ್ಯಾಮಗೌಡ ಹಾಗೂ ಪಿಎಸ್ಐ ನಾಗರಾಜ ಗಡಾದ ಮಾತನಾಡಿ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಹಿಂದೂ ಹಾಗೂ ಮುಸ್ಲಿಂ ಬಾಂಧವರು ಪರಸ್ಪರ ಸಹಕಾರದಿಂದ ಹಬ್ಬಗಳನ್ನು ಆಚರಿಸಬೇಕು. ಯಾವುದೇ ಕಾರಣಕ್ಕೂ ಶಾಂತಿ ಕದಡುವಂತಹ ಘಟನೆಗಳಿಗೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಹಿರಿಯರು, ಯುವಕರು ಹಾಗೂ ವಿವಿಧ ಸಂಘಟನೆಗಳು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಹಿರಿಯ ಮುಖಂಡ ಪೂರ್ಣಾಜಿ ಕರಾಟೆ, ಮೈನುದ್ದಿನ ಆಡೂರ, ಸಾಹೀಬ್ಜಾನ್ ಹವಾಲ್ದಾರ್, ಶರಣು ಗೋಡಿ, ಗಂಗಾಧರ ಮೆಣಸಿನಕಾಯಿ, ಅಂಜುಮನ್ ಸಂಸ್ಥೆ ಅಧ್ಯಕ್ಷ ಮುಕ್ತಾರಅಹ್ಮದ್ ಗದಗ, ಇಸ್ಮಾಯಿಲ್ ಆಡೂರ, ಭಾಷಾಸಾಬ ಮುಳಗುಂದ, ರಫೀಕ್ ಕಲ್ಬುರ್ಗಿ, ಫಿರ್ದೋಸ್ ಆಡೂರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.



