ದೊಡ್ಡಬಳ್ಳಾಪುರ: ಅಂಗಡಿ ಮುಂಭಾಗ ನಿಲ್ಲಿಸಿದ್ದ ಬೈಕ್ ಏಕಾಏಕಿ ಹೊತ್ತಿ ಉರಿದ ಘಟನೆ ದೊಡ್ಡಬಳ್ಳಾಪುರ ನಗರದ ವಾಸವಿ ಕಲ್ಯಾಣ ಮಂಟಪದ ಸಮೀಪ ನಡೆದಿದೆ. ದೊಡ್ಡಬಳ್ಳಾಪುರದ ಚಂದ್ರಶೇಖರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ವಾಹನ ಇದಾಗಿದ್ದು, ಕಳೆದ ನಾಲ್ಕು ವರ್ಷಗಳ ಹಿಂದೆ ಜಪಾನ್ ಮೂಲದ ಎಲೆಕ್ಟ್ರಿಕ್ ಬೈಕ್ ಖರೀದಿಸಿದ್ದರು.
ಇತ್ತೀಚೆಗಷ್ಟೇ ನೂತನ ಬ್ಯಾಟರಿಯನ್ನು ಚಂದ್ರಶೇಖರ್ ಹಾಕಿಸಿದ್ದರು. ಇದೀಗ ಅಂಗಡಿ ಮುಂದೆ ನಿಲ್ಲಿಸಿದ ನಂತರ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.
ಮುಖ್ಯ ರಸ್ತೆಯಲ್ಲಿ ದಟ್ಟವಾಗಿ ಹೊಗೆ ಆವರಿಸಿದ್ದರಿಂದ ಸ್ಥಳೀಯರಲ್ಲಿ ಆತಂಕವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



