ವಿಜಯಸಾಕ್ಷಿ ಸುದ್ದಿ, ಗದಗ : ನಮ್ಮ ಸಂವಿಧಾನದಲ್ಲಿರುವ ಮೂಲಭೂತ ಹಕ್ಕುಗಳು ಸಾಮಾಜಿಕ ನ್ಯಾಯದ ತಳಹದಿಗಳಾಗಿವೆ. ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಿ ಪ್ರತಿಯೊಬ್ಬರಿಗೂ ನ್ಯಾಯ ದೊರಕುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಹಿರಿಯ ದಿವಾಣಿ ನ್ಯಾಯಾಧೀಶರಾದ ಕೆ. ಗುರುಪ್ರಸಾದ ನುಡಿದರು.
ಅವರು ಗದಗ ನಗರದಲ್ಲಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ `ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾನತೆಯ ಪರಿಕಲ್ಪನೆಯಡಿ ೨೦೦೭ರಲ್ಲಿ ವಿಶ್ವ ಸಂಸ್ಥೆಯಲ್ಲಿ ಠರಾವು ಪಾಸ್ ಮಾಡಲಾಗಿದ್ದು, ಅದರ ಪ್ರಕಾರ ವಿಶ್ವದಾದ್ಯಂತ ೨೦೦೯ರಿಂದ ಪ್ರತಿ ವರ್ಷ ಫೆಬ್ರುವರಿ ೨೦ರಂದು ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗಿದೆ ಎಂದು ತಿಳಿಸಿದರು.
ಸಂವಿಧಾನದ ಪೀಠಿಕೆಯಲ್ಲಿರುವ ಪ್ರಮುಖ ಅಂಶಗಳಲ್ಲಿ ಸಾಮಾಜಿಕ ನ್ಯಾಯವೂ ಒಂದು. ನಮ್ಮ ಸಮಾಜದಲ್ಲಿರುವ ಜನರ ನಡುವೆ ಜಾತಿ-ಧರ್ಮಾಧಾರಿತ, ಲಿಂಗಾಧಾರಿತ ವ್ಯತ್ಯಾಸಗಳಿವೆ. ಅವುಗಳನ್ನು ಹೋಗಲಾಡಿಸಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮೀಸಲಾತಿ ಸೇರಿದಂತೆ ಹತ್ತು ಹಲವಾರು ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದರು.
ಅತಿಥಿಗಳಾಗಿ ಪಾಲ್ಗೊಂಡಿದ್ದ ತಾಲೂಕು ಸಮಾಜ ಕಲ್ಯಾಣಾಧಿಕಾರಿ ವಿಜಯಲಕ್ಷ್ಮಿ ಇಂಗಳಳ್ಳಿ ಮಾತನಾಡಿದರು. ವಿದ್ಯಾರ್ಥಿನಿ ಸಂಗೀತಾ ಪ್ರಾರ್ಥನಾ ಗೀತೆ ಹಾಡಿದರು. ಇನ್ನೋರ್ವ ವಿದ್ಯಾರ್ಥಿನಿ ನೇತ್ರಾವತಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಕಾರ್ಯಕದಲ್ಲಿ ವಸತಿ ನಿಲಯದ ವಾರ್ಡನ್ ವಸಂತಾ ಸೇರಿದಂತೆ ವಿದ್ಯಾರ್ಥಿನಿಯರು ಹಾಜರಿದ್ದರು.