ವಿಜಯಸಾಕ್ಷಿ ಸುದ್ದಿ, ಗದಗ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ಗೆಲ್ಲಿಸಿದ ರೀತಿಯಲ್ಲಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಬೆಂಬಲಿಸಿ, ಗೆಲ್ಲಿಸಿಕೊಡಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮನವಿ ಮಾಡಿದರು.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಪ್ರಚಾರಾರ್ಥವಾಗಿ ನಡೆದ ರಾಜಸ್ಥಾನ ಹಾಗೂ ಜೈನ್ ಸಮಾಜದವರ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ನಮ್ಮ ಬದುಕನ್ನು ಮುಂದಿಟ್ಟುಕೊಂಡು ಅಭಿವೃದ್ಧಿ, ಸಂವಿಧಾನ ರಕ್ಷಣೆ ಹಾಗೂ ಬಡವರ ಕಲ್ಯಾಣಗಳಿಗೆ ಒತ್ತುಕೊಟ್ಟು ಚುನಾವಣೆ ಎದುರಿಸುತ್ತಿದೆ. ಆದರೆ, ಬಿಜೆಪಿ ಭಾವನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ಮುಂದಾಗಿದೆ. ಇದು ದೇಶಕ್ಕೆ ಅಪಾಯಕಾರಿ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಮುಖಂಡ ಮಹೇಂದರ್ ಸಿಂಘ್ವಿ ಮಾತನಾಡಿ, ನಯ, ವಿನಯತೆ, ಸರಳತೆ ಮನೋಭಾವ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ನಮ್ಮ ಸಮಾಜದ ಪ್ರತಿಯೊಬ್ಬರೂ ಮತ ನೀಡುವ ಮೂಲಕ ಅವರನ್ನು ಗೆಲ್ಲಿಸಬೇಕು ಎಂದು ಸಮಾಜದವರಲ್ಲಿ ಮನವಿ ಮಾಡಿದರು.
ಮುಖಂಡ ಅಶೋಕ ಜೈನ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಮುಖಂಡರಾದ ರೂಪಚಂದ್ ಜೈನ್, ಅಮೃತಲಾಲ್ ಜೈನ್, ಮದನ್ ಬನ್ಸಾಲಿ, ಮನೋಜ ಭಾಪಣಾ, ದೀಪಾ ರಾಮಜಿ ಹಾಗೂ ರಾಜಸ್ಥಾನ ನಿವಾಸಿಗಳು ಇದ್ದರು.