ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ನೌಕರರ ಮೇಲೆ ನಡೆಯುವ ಹಲ್ಲೆ, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಠಿಣ ಕಾನೂನು ರೂಪಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಹೊಸ ಕಾನೂನು ರೂಪುಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ನಗರದ ಪಂಡಿತ್ ಭೀಮಸೇನ ಜೋಶಿ ರಂಗಮಂದಿರದಲ್ಲಿ ಭಾನುವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 2.73 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಇರುವ ನೌಕರರು ಒತ್ತಡದಿಂದ ಕೆಲಸ ನಿರ್ವಹಿಸುವುದರ ಜೊತೆಗೆ ನೆಮ್ಮದಿ, ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ, ನೌಕರರ ಮೇಲೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣಗಳು ಹೆಚ್ಚುತ್ತಿವೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಬಳಿ ಚರ್ಚಿಸಿದ್ದು, ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದರೆ 50 ಸಾವಿರ ರೂ ದಂಡ, ಮೂರು ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಲು ಆಗ್ರಹಿಸಿದ್ದೇವೆ ಎಂದು ತಿಳಿಸಿದರು.
ಸರ್ಕಾರಿ ನೌಕರರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಪಡೆಯಲು ಎದುರಿಸುತ್ತಿರುವ ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಹಂತ ಹಂತವಾಗಿ ಕ್ರಮವಹಿಸಲಾಗುವುದು. ಈ ಯೋಜನೆ ಬಗ್ಗೆ ಟೀಕೆ ಮಾಡಿದರೆ ವೈಯಕ್ತಿಕವಾಗಿ ತಮ್ಮನ್ನು ತಾವೇ ಟೀಕೆ ಮಾಡಿಕೊಂಡಂತೆ. ಈ ಯೋಜನೆ ಅಡಿ ಪ್ರಸ್ತುತ 222 ಆಸ್ಪತ್ರೆಗಳು ಸೇವೆ ಒದಗಿಸುತ್ತಿವೆ. ಅವುಗಳನ್ನು 400 ಆಸ್ಪತ್ರೆಗಳಿಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.
ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕರು ಟಿಇಟಿ ಪರೀಕ್ಷೆ ಬರೆಯಬೇಕು ಎಂಬ ಆದೇಶ ಕೈಬಿಡುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಲಾಗಿದೆ. ಈವರೆಗೆ 96 ಸಾವಿರ ಮಂದಿ ಶಿಕ್ಷಕರು ಇದಕ್ಕೆ ಸಹಿ ಹಾಕಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಸಹಿ ಮಾಡಿ ಕೊಟ್ಟರೆ ಪ್ರಕರಣ ಗೆಲ್ಲಲು ನೆರವಾಗಲಿದೆ. ವಕೀಲ ಚಂದ್ರಶೇಖರ್ ಅವರ ಶುಲ್ಕವನ್ನು ರಾಜ್ಯ ಸಂಘದಿಂದಲೇ ಪಾವತಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ವಿವಿಧ ಭಾಗಗಳಲ್ಲಿರುವ ಸಂಘದ ನಿವೇಶನಗಳು ಹಾಗೂ ಕಟ್ಟಡಗಳ ದಾಖಲೆಗಳನ್ನು ಸರಿಯಾಗಿ ಸಂರಕ್ಷಿಸಬೇಕು. ಲೀಸ್ ಅವಧಿ ಮುಗಿದ ಸ್ಥಳಗಳಲ್ಲಿ ಮರು ಲೀಸ್ ಪ್ರಕ್ರಿಯೆ ಕೈಗೊಳ್ಳಬೇಕು. ಅನಗತ್ಯವಾಗಿ ಡ್ರಾ ಮಾಡಲಾದ ಸಂದ ಹಣವನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಗಡಿನಾಡ ಕನ್ನಡ ಉತ್ಸವ, ನೌಕರರ ದಿನಾಚರಣೆ, ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಯೋಜನೆ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು.
“ರಾಜ್ಯ ಸರ್ಕಾರ ನೌಕರರ ಸಂಘ ತನ್ನ ಇತಿ-ಮಿತಿಯೊಳಗೆ ನೌಕರರ ಹಿತ ಕಾಪಾಡುವ ಕೆಲಸ ಮಾಡುತ್ತಿದೆ. ಟೀಕೆಗಳಿಗೆ ಪ್ರತಿಕ್ರಿಯಿಸಲು ಹೋಗುವುದಿಲ್ಲ. ಸಾಧನೆಗಳೇ ಮಾತನಾಡಬೇಕು ಎಂಬುದು ನನ್ನ ನಿಲುವು”
– ಸಿ.ಎಸ್. ಷಡಾಕ್ಷರಿ.
ನೌಕರರ ಸಂಘದ ರಾಜ್ಯಾಧ್ಯಕ್ಷ.



