ಚಿಕ್ಕಮಗಳೂರು: ರೈತರಿಗೆ ತೀವ್ರ ಕಾಟ ನೀಡುತ್ತಿದ್ದ ಕಾಡುಕೋಣಗಳ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಆರಂಭಿಸಿದ್ದ ‘ಆಪರೇಷನ್ ಕಾಡುಕೋಣ’ ಯಶಸ್ವಿಯಾಗಿ ಮುಕ್ತಾಯವಾಗಿದೆ. ಮೂರು ಕಾಡುಕೋಣಗಳ ಪೈಕಿ ಒಂದು ದೈತ್ಯ ಕಾಡುಕೋಣವನ್ನು ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ಕಳೆದ ಎರಡು ದಿನಗಳಿಂದ ಅರಣ್ಯ ಸಿಬ್ಬಂದಿ ನಡೆಸಿದ ಸಂಘಟಿತ ಕಾರ್ಯಾಚರಣೆ ಬಳಿಕ ಈ ಯಶಸ್ಸು ಸಾಧಿಸಲಾಗಿದ್ದು, ರೈತ ಸಮುದಾಯದಲ್ಲಿ ಆತಂಕದ ವಾತಾವರಣ ಕಡಿಮೆಯಾಗಿದೆ. ಈ ರೀತಿಯ ಕಾರ್ಯಾಚರಣೆ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ನಡೆದಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಸೆರೆ ಸಿಕ್ಕ ಕಾಡುಕೋಣವನ್ನು ತಕ್ಷಣವೇ ಶಿವಮೊಗ್ಗದ ತ್ಯಾವರೆಕೊಪ್ಪ ವನ್ಯಜೀವಿ ಉದ್ಯಾನಕ್ಕೆ ಸ್ಥಳಾಂತರಿಸಲಾಗಿದೆ.
ಮಲೆನಾಡಿನ ಹಲವು ಭಾಗಗಳಲ್ಲಿ ಬೆಳೆ ನಾಶ ಹಾಗೂ ಜನರ ಮೇಲೆ ದಾಳಿ ಭೀತಿ ಉಂಟಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಕಾರ್ಯಾಚರಣೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಘಟನೆ ಸ್ಥಳಕ್ಕೆ ಭೇಟಿ ನೀಡಿದ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅರಣ್ಯ ಸಿಬ್ಬಂದಿಯ ಕಾರ್ಯವನ್ನು ಪ್ರಶಂಸಿಸಿದ್ದಾರೆ.
ಆದರೆ ಪರಿಸರವಾದಿಗಳು ಈ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ್ದು, ಕಾಡುಕೋಣಗಳು ಒತ್ತಡಕ್ಕೆ ಒಳಗಾದರೆ ಗಂಭೀರ ಪರಿಣಾಮ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.



