ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರತಿಬಂಧಕಾಜ್ಞೆ ಜಾರಿ

0
section
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7ರಂದು ಮತದಾನ ಜರುಗಲಿದೆ. ಮತದಾನವನ್ನು ಸುಗಮವಾಗಿ ಹಾಗೂ ಮುಕ್ತವಾಗಿ ಜರುಗಿಸುವ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನವು ಕೊನೆಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಅಂದರೆ ಮೇ 5ರಂದು ಸಂಜೆ 6 ಗಂಟೆಯಿಂದ ಮೇ 8ರ ಸಂಜೆ 6 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ಅನ್ವಯ ಜಿಲ್ಲಾದ್ಯಂತ ಕೆಳಕಂಡಂತೆ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದ್ದಾರೆ.

Advertisement

ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ 5ಕ್ಕಿಂಚ ಹೆಚ್ಚು ಜನರು ಸೇರುವುದು, ಮೆರವಣಿಗೆ ಅಥವಾ ಸಭೆ-ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ.

ಶಸ್ತç, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟುಮಾಡಬಹುದಾದ ಯಾವುದೇ ಮಾರಕಾಸ್ತçವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವನ್ನು ಪ್ರತಿಬಂಧಿಸಲಾಗಿದೆ.

ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಲಾಗಿದೆ. ಮತದಾನ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಕಲ್ಲು, ಕ್ಷಾರಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಕಲ್ಲುಗಳನ್ನು ಮತ್ತು ಎಸೆಯುವ ವಸ್ತುಗಳನ್ನು, ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.

ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿ ಈ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳನ್ನು ಬಹಿರಂಗವಾಗಿ ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಂಡು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.
ಚುನಾವಣೆಯ ಸಂಬಂಧ ಸ್ಥಾಪಿಸಿರುವ ಚೆಕ್‌ಪೋಸ್ಟ್ಗಳಲ್ಲಿ ಮತಕ್ಷೇತ್ರದ ಹೊರಗಿನಿಂದ ಬರುವ ಎಲ್ಲ ರೀತಿಯ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸತಕ್ಕದ್ದು. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಆ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಪಾಲಿಸುವುದು.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಈ ಆದೇಶವು ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಹಿರಂಗ ಪ್ರಚಾರ ಮೇ 5ರ ಸಂಜೆ 6 ಗಂಟೆಗೆ ಕೊನೆಗೊಳ್ಳುತ್ತಿದ್ದು, ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ. ಈ ಅವಧಿಯ ನಂತರ ಜಿಲ್ಲೆಯ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಕಲ್ಯಾಣ ಮಂಟಪಗಳು/ಸಮುದಾಯ ಭವನಗಳು/ಹೋಟೆಲ್‌ಗಳು ಮತ್ತು ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿದವರ ಪಟ್ಟಿಗಳ ಪರಿಶೀಲನೆ ಮಾಡುವುದು. ಜಿಲ್ಲೆಯ ಮತದಾರರಲ್ಲದವರನ್ನು ಮತಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಪೊಲೀಸ್ ಇಲಾಖೆಯವರು ಕ್ರಮ ವಹಿಸುವುದು.

ಮತದಾನದ ದಿನದಂದು ಮತಗಟ್ಟೆಗಳ ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟಾçನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ( ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು/ಸಿಬ್ಬಂದಿ ಹೊರತುಪಡಿಸಿ). ಮತದಾನ ದಿನದಂದು ಮತಗಟ್ಟೆಗಳ ಸುತ್ತ ೨೦೦ ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ /ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

 


Spread the love

LEAVE A REPLY

Please enter your comment!
Please enter your name here