ಕುಡಿಯುವ ನೀರು ಸರಬರಾಜು ಸಮರ್ಪಕವಾಗಿರಲಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿನ ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಯಾವುದೇ ತೊಂದರೆಯಾಗದAತೆ ನಿರ್ವಹಿಸಬೇಕು. ಕುಡಿಯುವ ನೀರು, ಮೇವಿನ ಸ್ಥಿತಿಗತಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸಬೇಕು. ಒಂದು ವೇಳೆ ನೀರಿನ ಸಮಸ್ಯೆ ಉದ್ಭವಿಸಿದರೆ ಮುಂಜಾಗ್ರತೆಯಾಗಿ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಸರಬರಾಜು ಮಾಡಲು ಅಂತಹ ಬೋರ್‌ವೆಲ್‌ಗಳ ಸುಸ್ಥಿತಿಯಲ್ಲಿವೆಯೋ ಹೇಗೆ ಎಂಬುದರ ಕುರಿತು ಪರಿಶೀಲಿಸಬೇಕು. ಪ್ರಸಕ್ತ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಶುರುವಾಗಿದ್ದು, ಮುಂಗಾರು ಮಳೆಯೂ ಕೂಡ ಉತ್ತಮವಾಗುವ ನಿರೀಕ್ಷೆಯಿದೆ ಎಂದರು.

ರೋಣ ಮತ್ತು ನರಗುಂದ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಕೆರೆಗಳಿಗೆ ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಅನಗತ್ಯವಾಗಿ ನೀರು ಪೋಲಾಗದಂತೆ ಅದನ್ನು ಮರುಬಳಕೆ ಮಾಡುವ ಕುರಿತು ಯೋಚಿಸಿ ನೀರಿನ ಸಂಪನ್ಮೂಲಗಳ ಸಮರ್ಪಕ ಬಳಕೆಯಾಗುವಂತೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ. ಎಚ್. ನಾಗರಾಜ ಮಾತನಾಡಿ, ಜಿಲ್ಲೆಯಲ್ಲಿ ಜಾನುವಾರುಗಳಿಗೆ ಸಾಕಷ್ಟು ಮೇವಿನ ದಾಸ್ತಾನಿದೆ. ಯಾವುದೇ ಕೊರತೆಯಿರುವುದಿಲ್ಲ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು, ತಹಸೀಲ್ದಾರರುಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಎಲ್ಲ ನೀರಿನ ಮೂಲಗಳಲ್ಲಿನ ನೀರು ಕುಡಿಯಲು ಯೋಗ್ಯ ಎಂಬುದರ ಕುರಿತು ಪರೀಕ್ಷೆ ನಡೆಸಬೇಕು. ಬೋರ್‌ವೆಲ್‌ನ ಸುತ್ತಮುತ್ತ ಕಲುಷಿತ ಅಂಶಗಳು ಇವೆಯೋ ಇಲ್ಲವೋ ಎಂಬುದರ ಕುರಿತು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ವಾಟರ್ ಹೆಡ್ ಟ್ಯಾಂಕ್ ಸ್ವಚ್ಛತೆಗೆ ನಿಗಾ ವಹಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.


Spread the love

LEAVE A REPLY

Please enter your comment!
Please enter your name here