ವಿಜಯಸಾಕ್ಷಿ ಸುದ್ದಿ, ಗದಗ: ಗದಗ ನಗರದ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕರ ಚಿಕಿತ್ಸೆಗೆ ಬಳಸಬೇಕು ಹಾಗೂ ಹಳೆಯ ಜಿಲ್ಲಾ ಆಸ್ಪತ್ರೆಯಲ್ಲೂ ಕನಿಷ್ಠ ೫೦ರಿಂದ ೧೦೦ ಹಾಸಿಗೆಗಳ ಚಿಕಿತ್ಸಾ ವ್ಯವಸ್ಥೆ ಪುನರಾರಂಭಿಸಬೇಕು ಎಂದು ಗದಗ ಜಿಲ್ಲಾ ವಿಕಾಸ ವೇದಿಕೆ ವತಿಯಿಂದ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗದಗ ನಗರಕ್ಕೆ ಆಗಮಿಸಿದ್ದ ಬಸವರಾಜ ಬೊಮ್ಮಾಯಿ ಅವರನ್ನು ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ನೇತೃತ್ವದ ನಿಯೋಗ ಭೇಟಿ ಮಾಡಿ, ನಗರದ ಎರಡು ಆಸ್ಪತ್ರೆಗಳನ್ನು ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಜನರಿಗೆ ಹೆಚ್ಚಿನ ಆರೋಗ್ಯ ಸೇವೆ ಒದಗಿಸುವಂತೆ ಮನವಿ ಮಾಡಿತು.
ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ನಗರದ ಎರಡೂ ಆಸ್ಪತ್ರೆಗಳಲ್ಲಿ ಜನರಿಗೆ ಪೂರ್ಣ ಪ್ರಮಾಣದ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಗಮನ ಹರಿಸುವುದಾಗಿ ಭರವಸೆ ನೀಡಿದರು. ಇದರಿಂದ ಗದಗ ನಗರ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.
ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದ ಸಂದರ್ಭದಲ್ಲಿ ಅಗತ್ಯವಿರುವ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸುವ ವ್ಯವಸ್ಥೆ ಕಲ್ಪಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಎರಡೂ ಆಸ್ಪತ್ರೆಗಳಲ್ಲಿ ಸಮರ್ಪಕ ಚಿಕಿತ್ಸಾ ಸೌಲಭ್ಯ ಒದಗಿಸಬೇಕು ಎಂದು ವೇದಿಕೆ ಮನವಿ ಮಾಡಿತು.
ಅದೇ ರೀತಿ ಹಳೆಯ ಜಿಲ್ಲಾ ಆಸ್ಪತ್ರೆಯ ಒಳಾಂಗಣ ಮತ್ತು ಹೊರಾಂಗಣವನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಕನಿಷ್ಠ ೫೦ರಿಂದ ೧೦೦ ಹಾಸಿಗೆಗಳ ಆಸ್ಪತ್ರೆಯಾಗಿ ಪುನರಾರಂಭಿಸುವ ಮೂಲಕ ಹಿರಿಯ ನಾಗರಿಕರು, ಬಿಪಿ, ಮಧುಮೇಹ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಅಗತ್ಯ ಚಿಕಿತ್ಸೆ ದೊರೆಯುವಂತೆ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಈ ಕುರಿತು ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಹಾಗೂ ಜಿಲ್ಲಾ ಆಡಳಿತದೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ವೇದಿಕೆ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ರಾಜು ಕುರಡಗಿ, ನಗರಸಭೆ ಸದಸ್ಯರಾದ ಅನಿಲ ಅಬ್ಬಿಗೇರಿ, ಚಂದ್ರು ತಡಸದ, ಕಿರಣ ಭೂಮಾ, ರಮೇಶ್ ಸಜ್ಜಗಾರ, ಪ್ರಶಾಂತ ನಾಯ್ಕರ, ಅಮರನಾಥ ಬೆಟಗೇರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
“ನಗರದ ಎರಡು ಆಸ್ಪತ್ರೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಿದರೆ ಗದಗ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರಿಗೆ ಸ್ಥಳೀಯವಾಗಿಯೇ ಉತ್ತಮ ಚಿಕಿತ್ಸೆ ದೊರೆಯಲಿದೆ. ಈ ನಿಟ್ಟಿನಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಸ್ಪಂದಿಸಿರುವುದು ಸ್ವಾಗತಾರ್ಹ.”
ವಿಶ್ವನಾಥ ಖಾನಾಪೂರ, ಅಧ್ಯಕ್ಷರು, ಗದಗ ಜಿಲ್ಲಾ ವಿಕಾಸ ವೇದಿಕೆ



