ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕು ಸೇರಿದಂತೆ ಮತಕ್ಷೇತ್ರದಾದ್ಯಂತ ಪ್ರತಿ ಗ್ರಾಮಗಳಿಗೂ ಅನುದಾನವನ್ನು ನೀಡಲಾಗಿದ್ದು, ಸಮರ್ಪಕವಾಗಿ ಕೆಲಸಗಳಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಅನುದಾನದ ಲಭ್ಯತೆಯಿದ್ದರೂ ಸಹ ಅಭಿವೃದ್ಧಿ ಕಾರ್ಯಗಳು ಏಕೆ ನಿಧಾನಗತಿಯಲ್ಲಿ ಸಾಗುತ್ತಿವೆ ಎಂದು ಶಾಸಕ ಜಿ.ಎಸ್. ಪಾಟೀಲ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅವರು ಬುಧವಾರ ತಾ.ಪಂ ಸಭಾಭವನದಲ್ಲಿ ಜರುಗಿದ ಮತಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿ.ಪಂ, ಪಿಡಬ್ಲುಡಿ, ಆರ್ಡಬ್ಲುಎಸ್ ಇಲಾಖೆಗಳಿಗೆ ಅನುದಾನವನ್ನು ಒದಗಿಸಲಾಗಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳು ನಡೆದಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಂದಾಗ ಮಾತ್ರ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಲು ಸಾಧ್ಯ ಎಂದರು.
ಗ್ರಾಮೀಣ ಭಾಗಗಳ ರಸ್ತೆಗಳು ಸೇರಿದಂತೆ ಮುಖ್ಯ ರಸ್ತೆಗಳು ಅತಿಯಾದ ಮಳೆಯಿಂದ ಹಾಳಾಗಿದ್ದು, ಅವುಗಳನ್ನು ದುರಸ್ತಿಗೊಳಿಸಿ ಎಂದು ಎರಡು ತಿಂಗಳ ಹಿಂದೆಯೇ ಸೂಚಿಸಲಾಗಿತ್ತು. ಆದರೆ ಈಗ ಕೆಲಸ ಆರಂಭಿಸಿದ್ದೀರಿ. ಈ ರೀತಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾದರೆ ನೀವು ನಮಗೆ ಬೇಡ ಎಂದು ಕೆಲ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಬೇಗನೆ ಎಲ್ಲ ಕೆಲಸಗಳು ಮುಗಿಯಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಲಕ್ಕಲಕಟ್ಟಿ, ನಾಗೇಂದ್ರಗಡ, ಹರ್ಲಾಪೂರ, ಉಮಚಗಿ, ನಾರಾಯಣಪೂರ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಸಿಸಿ ರಸ್ತೆಗಳ ನಿರ್ಮಾಣ ಕಾರ್ಯ ನಿಧಾನಗತಿಯಲ್ಲಿ ನಡೆದಿದ್ದು, ಈ ವಿಷಯ ನಿಮ್ಮ ಗಮನಕ್ಕೆ ಬಂದಿಲ್ಲವೇ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರ ಆರ್.ಎನ್. ಪುರೋಹಿತರನ್ನು ಪ್ರಶ್ನಿಸಿದ ಶಾಸಕರು, ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿಷ್ಕಾಳಜಿ ವಹಿಸಬೇಡಿ ಎಂದರು.
ಇದೇ ಸಂಧರ್ಭದಲ್ಲಿ ಆರ್ಡಬ್ಲುಎಸ್ ಮುಖ್ಯ ಅಭಿಯಂತರ ಚಂದ್ರ ನೇರಲೆಕರವರಿಗೂ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗೃತಿ ಕ್ರಮ ವಹಿಸಿ ಎಂದು ಸೂಚಿಸಿದರು. ನಂತರ ಅವರು ವಿವಿಧ ಇಲಾಖೆಗಳ ಪ್ರಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರುಗಳಾದ ಸಂಗನಗೌಡ ಪಾಟೀಲ, ಶರಣಪ್ಪ ಬೆಟಗೇರಿ, ರೋಣ, ಗಜೇಂದ್ರಗಡ, ಮುಂಡರಗಿ, ಗದಗ ತಾ.ಪಂ ಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಮತಕ್ಷೇತ್ರದಲ್ಲಿ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆಗೊಂಡಿದೆ. ಅವುಗಳಿಗೆ ಶೀಘ್ರವೇ ಚಾಲನೆ ನೀಡಿ. ಇನ್ನು ಪಿಎಂಜಿಎಸ್ಆರ್ವಾಯ್ ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಅನುಮತಿ ದೊರತಿದ್ದು, ಅಧಿಕಾರಿಗಳು ಎಲ್ಲ ಕಾಮಗಾರಿಗಳ ಪ್ರಗತಿಗೆ ಶ್ರಮಿಸಬೇಕು. ಮಾರನಬಸರಿ ಗ್ರಾಮಕ್ಕೆ ಮತ್ತೆ 35 ಲಕ್ಷ ರೂಗಳ ಅನುದಾನವನ್ನು ನೀಡಲಾಗಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಿ”
-
ಜಿ.ಎಸ್. ಪಾಟೀಲ.
ಶಾಸಕರು.



