ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಲಕ್ಷ್ಮೇಶ್ವರ ಪುರಸಭೆ ವತಿಯಿಂದ ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ, ಮಾನವನು ಪರಿಸರ ಅವಲಂಬಿ ಜೀವಿಯಾಗಿದ್ದು, ಪರಿಸರದಿಂದಲೇ ಎಲ್ಲವನ್ನು ಪಡೆಯುತ್ತಿದ್ದೇವೆ. ಹೀಗಾಗಿ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಪಟ್ಟಣದ ಇಟ್ಟಿಗೆರೆ ದಂಡೆ, ಉಮಾ ವಿದ್ಯಾಲಯ ಹೈಸ್ಕೂಲ್, ಕಾಲೇಜು ಆವರಣ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನೂರಾರು ಸಸಿಗಳನ್ನು ನೆಡುವ ಕಾರ್ಯ ನೆರವೇರಿಸಲಾಯಿತು. ಪ್ರತಿಯೊಬ್ಬರೂ ತಮ್ಮ ಮನೆ ಸುತ್ತಮುತ್ತಲಿನ ಖಾಲಿ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು.
ಪರಿಸರ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಾಗದೇ ನಿರಂತರ ಜಾಗೃತಿ ಅಭಿಯಾನವಾಗಬೇಕು. ನೆಟ್ಟ ಸಸಿಗಳನ್ನು ಕಾಳಜಿಯಿಂದ ಬೆಳೆಸಿದಾಗ ಮಾತ್ರ ಪರಿಸರ ದಿನಾಚರಣೆಗೆ ನಿಜವಾದ ಅರ್ಥ ಸಿಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಹನುಮಂತ ನಂದೆಣ್ಣವರ, ವ್ಯವಸ್ಥಾಪಕಿ ಮಂಜುಳಾ ಹೂಗಾರ, ಪುರಸಭೆ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.



